ADVERTISEMENT

ಸಂಘರ್ಷದ ಹಾದಿ ಹಿಡಿದ ವಕೀಲರು

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2012, 19:30 IST
Last Updated 4 ಮಾರ್ಚ್ 2012, 19:30 IST

ಬೆಂಗಳೂರು: ಮಾಧ್ಯಮ ಸಂಸ್ಥೆಗಳು ಮತ್ತು ಪತ್ರಕರ್ತರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಯಾವುದೇ ವಕೀಲರು ವಾದ ಮಂಡನೆ ಮಾಡದಿರಲು ಶನಿವಾರ ನಡೆದ ವಕೀಲರ ಸಂಘದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ವಕೀಲರು ಮಾಧ್ಯಮ ಪ್ರತಿನಿಧಿಗಳ ಮೇಲೆ ಶುಕ್ರವಾರ ನಡೆಸಿದ ಹಲ್ಲೆ ಮತ್ತು ನಂತರದ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಭಾನುವಾರ `ಪ್ರಜಾವಾಣಿ~ಗೆ ಪ್ರತಿಕ್ರಿಯಿಸಿದ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ಈ ವಿಷಯ ತಿಳಿಸಿದರು. ವಕೀಲರು ಪ್ರಸ್ತಾಪಿಸಿದ ವಿಷಯಗಳನ್ನು ಆಧರಿಸಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಅವರು ಹೇಳಿದರು.

ರೆಡ್ಡಿ ಬೆಂಬಲಿಗರತ್ತ ಅನುಮಾನ: ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ನಡೆದ ಗಲಭೆಯ ಹಿಂದೆ ಹೊರಗಿನಿಂದ ಬಂದ ವ್ಯಕ್ತಿಗಳ ಕೈವಾಡ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಬಳ್ಳಾರಿಯಿಂದ ಬಂದಿದ್ದ ಕೆಲವರು ವಕೀಲರಂತೆ ವೇಷ ಧರಿಸಿಕೊಂಡು ನ್ಯಾಯಾಲಯಕ್ಕೆ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದರು.

`ಗುರುವಾರ ವಕೀಲರ ಸಂಘದ ಮಳಿಗೆಗಳಲ್ಲಿ 200ಕ್ಕೂ ಹೆಚ್ಚು ಕಪ್ಪು ಕೋಟ್‌ಗಳು ಮಾರಾಟವಾಗಿವೆ. ಜನಾರ್ದನ ರೆಡ್ಡಿ ಅವರ ಬೆಂಬಲಿಗರು ಕಪ್ಪು ಕೋಟ್ ಧರಿಸಿ ನ್ಯಾಯಾಲಯಕ್ಕೆ ಬಂದಿರುವ ಬಗ್ಗೆ ಛಾಯಾಚಿತ್ರಗಳು ಮತ್ತು ವಿಡಿಯೊ ತುಣುಕುಗಳು ಇವೆ. ಮಾಧ್ಯಮಗಳ ಮೇಲಿನ ದಾಳಿಯ ಹಿಂದೆ ಅವರ ಕೈವಾಡ ಇರುವ ಸಾಧ್ಯತೆ ಇದೆ. ಅಂತಹ ವ್ಯಕ್ತಿಗಳ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು~ ಎಂದರು.

ವರ್ಗಾವಣೆಗೆ ಆಗ್ರಹ: ಶುಕ್ರವಾರ ನಡೆದ ಗಲಭೆಯ ವೇಳೆ ಪೊಲೀಸರು ಎಲ್ಲೆ ಮೀರಿ ವರ್ತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ಮತ್ತು ನಗರ ಪೊಲೀಸ್ ಕಮಿಷನರ್ ಕೆ.ಜ್ಯೋತಿ ಪ್ರಕಾಶ್ ಮಿರ್ಜಿ ಅವರ ವರ್ಗಾವಣೆಗೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಗಿದೆ. ಅದನ್ನು ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಫ್ಯಾಕ್ಸ್ ಮೂಲಕ ರವಾನಿಸಲಾಗಿದೆ ಎಂದು ಅವರು ತಿಳಿಸಿದರು.

`ಕೆಲವು ವಕೀಲರು ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿರುವುದನ್ನು ನಾವು ಖಂಡಿಸುತ್ತೇವೆ. ಆದರೆ, ನ್ಯಾಯಾಲಯದ ಆವರಣದಲ್ಲಿ ಅನುಮತಿ ಇಲ್ಲದೇ ಲಾಠಿ ಚಾರ್ಜ್ ನಡೆಸಲಾಗಿದೆ. ಇದರ ಹಿಂದೆ ಬಿದರಿ ಮತ್ತು ಮಿರ್ಜಿ ಅವರ ಕೈವಾಡವಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿದ್ದೇವೆ~ ಎಂದು ಸುಬ್ಬಾರೆಡ್ಡಿ ವಿವರಿಸಿದರು.

ನ್ಯಾಯಾಲಯದ ಆವರಣದಲ್ಲಿ ಲಾಠಿ ಚಾರ್ಜ್‌ನಂತಹ ಕ್ರಮ ಕೈಗೊಳ್ಳುವಾಗ ಅಲ್ಲಿನ ಮುಖ್ಯಸ್ಥರ ಅನುಮತಿ ಅಗತ್ಯ. ಆದರೆ, ಶುಕ್ರವಾರ ಅನುಮತಿ ಇಲ್ಲದೇ ಪೊಲೀಸರು ವಕೀಲರು ಮತ್ತು ಕಕ್ಷಿದಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ. ಡಿಜಿಪಿಯವರು ಸೌಜನ್ಯಕ್ಕೂ ಸ್ಥಳಕ್ಕೆ ಬರಲಿಲ್ಲ. ನಗರ ಪೊಲೀಸ್ ಕಮಿಷನರ್ ಕೂಡ ಸರಿಯಾಗಿ ಕರ್ತವ್ಯ ನಿರ್ವಹಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲೇಬೇಕು. ಗೃಹ ಸಚಿವ ಆರ್.ಅಶೋಕ ಕೂಡ ಅಸಮರ್ಥರು. ಗೃಹ ಖಾತೆಯನ್ನು ಅವರಿಂದ ಹಿಂದಕ್ಕೆ ಪಡೆದು, ಬೇರೆ ಖಾತೆ ನೀಡಬೇಕು ಎಂದು ಒತ್ತಾಯಿಸಿದರು.

ಸ್ಥಳಾಂತರಕ್ಕೆ ಒತ್ತಾಯ: ಪ್ರಭಾವಿ ವ್ಯಕ್ತಿಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ವೇಳೆ ಪದೇ ಪದೇ ವಕೀಲರು ಮತ್ತು ಮಾಧ್ಯಮ ಪ್ರತಿನಿಧಿಗಳ ನಡುವೆ ಘರ್ಷಣೆ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಿಬಿಐ ಮತ್ತು ಲೋಕಾಯುಕ್ತ ವಿಶೇಷ ನ್ಯಾಯಾಲಯಗಳನ್ನು ನಗರ ಸಿವಿಲ್ ನ್ಯಾಯಾಲಯಗಳ ಆವರಣದಿಂದ ಸ್ಥಳಾಂತರಿಸುವಂತೆ ರಾಜ್ಯ ವಕೀಲರ ಪರಿಷತ್ ಸರ್ಕಾರವನ್ನು ಆಗ್ರಹಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.