ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಸಚಿವ ಮತ್ತು ಹಿರಿಯ ಬಿಜೆಪಿ ಧುರೀಣ ಡಾ.ವಿ.ಎಸ್. ಆಚಾರ್ಯ (72)ಇನ್ನಿಲ್ಲ.
ಮಂಗಳವಾರ ಮಧ್ಯಾಹ್ನ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ರಾಜ್ಯ ಸರ್ಕಾರಿ ಕಾಲೇಜು ಪ್ರಾಂಶುಪಾಲರ ವೇದಿಕೆ ಆಯೋಜಿಸಿದ್ದ ಸಮಾರಂಭಕ್ಕೆ ಆಗಮಿಸಿದ ಅವರು ಕಾರಿಳಿದು ಸಭಾಂಗಣದೊಳಕ್ಕೆ ಪ್ರವೇಶಿಸಿದ ಕೂಡಲೇ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲ ನೀಡಲಿಲ್ಲ.
ಉಡುಪಿಯ ಡಾ. ವಿ.ಎಸ್. ಆಚಾರ್ಯ ಕರ್ನಾಟಕ ಬಿಜೆಪಿಯ ಹಿರಿಯ ನಾಯಕರಲ್ಲಿ ಒಬ್ಬರು. 1959ರಲ್ಲಿ ವೈದ್ಯಕೀಯ ಪದವಿ ಪಡೆದಿದ್ದ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಿದ್ಧಾಂತಗಳಿಗೆ ಮಾರು ಹೋಗಿ ಸಂಘದ ಆದೇಶದಂತೆಯೇ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ, ಒಬ್ಬಳು ಪುತ್ರಿ ಮತ್ತು ನಾಲ್ವರು ಪುತ್ರರನ್ನು ಅಗಲಿದ್ದಾರೆ.
ಆಚಾರ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಸದಾನಂದಗೌಡ ಸೇರಿದಂತೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ. ಮಂಗಳವಾರ ಸಂಜೆಯೇ ಉಡುಪಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.