ಚಿತ್ರದುರ್ಗ: ಪರಿಶಿಷ್ಟ ಜಾತಿಯಲ್ಲಿಯೇ ಅತಿಹೆಚ್ಚು ಜನಸಂಖ್ಯೆ ಹೊಂದಿದ ಮಾದಿಗ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಒತ್ತಾಯಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯನಂತರ ಇದೇ ಮೊದಲ ಬಾರಿಗೆ ಮಾದಿಗ ಸಮುದಾಯದ ನಾಯಕರಿಗೆ ಪ್ರತಿನಿಧ್ಯ ಸಿಕ್ಕಿಲ್ಲ. ಇದು ಸಮುದಾಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಸಾಮಾಜಿಕ ನ್ಯಾಯಾಯದ ಪರವಾಗಿರುವುದಾಗಿ ಹೇಳಿಕೊಳ್ಳುವ ಕಾಂಗ್ರೆಸ್, ಮಾದಿಗ ಸಮುದಾಯದ ಹಿತ ಕಾಪಾಡಬೇಕು’ ಎಂದರು.
‘ಮಾದಿಗ ಸಮುದಾಯಕ್ಕೆ ಸೇರಿದ ಜನಪ್ರತಿನಿಧಿ ಜೆಡಿಎಸ್ನಲ್ಲಿ ಇಲ್ಲ. ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ನಿಭಾಯಿಸುವ ಸಾಮರ್ಥ್ಯ ಇರುವ ಹಲವರು ಇದ್ದಾರೆ. ಕೆಜಿಎಫ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ರೂಪಾ, ವಿಧಾನಪರಿಷತ್ ಸದಸ್ಯರಾದ ತಿಮ್ಮಾಪುರ ಹಾಗೂ ಧರ್ಮಸೇನಾ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರು’ ಎಂದು ಹೇಳಿದರು.
‘ಎಚ್.ಡಿ.ಕುಮಾರಸ್ವಾಮಿ ಅವರು ಈ ಹಿಂದೆ ಉತ್ತಮ ಆಡಳಿತ ನೀಡಿದ್ದರು. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೂ ಮಾದಿಗರ ಕುರಿತು ವಿಶೇಷ ಕಾಳಜಿ ಇದೆ. ಸಮುದಾಯದ ಹಿತದೃಷ್ಟಿಯಿಂದ ಸಮ್ಮಿಶ್ರ ಸರ್ಕಾರದಲ್ಲಿ ಮಾದಿಗರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಮನವಿ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.