ಹುಬ್ಬಳ್ಳಿ: ರಾಜ್ಯದಲ್ಲಿ ಸಣ್ಣ ಕೈಗಾರಿಕೆಗಳ ಉಸ್ತುವಾರಿಗೆ ಪ್ರತ್ಯೇಕ ಇಲಾಖೆ ಆರಂಭಿಸಿ, ಕಾರ್ಯದರ್ಶಿ ಹುದ್ದೆಯನ್ನೂ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಶನಿವಾರ ಇಲ್ಲಿ ಪ್ರಕಟಿಸಿದರು.
ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, `ಇನ್ನು ಮುಂದೆ ಸಣ್ಣ ಕೈಗಾರಿಕೆಗಳಿಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಇಲಾಖೆ ಮಟ್ಟದಲ್ಲೇ ಇತ್ಯರ್ಥಗೊಳಿಸಲಾಗುವುದು. ಇದರಿಂದ ಅನಗತ್ಯ ವಿಳಂಬ ತಪ್ಪಲಿದೆ~ ಎಂದರು.
`ಸಣ್ಣ ಕೈಗಾರಿಕೆಗಳ (ಎಸ್ಎಸ್ಐ) ಮೇಲಿರುವ ಬಂಡವಾಳ ಮಿತಿಯನ್ನು ಮೂರು ಕೋಟಿಯಿಂದ 15 ಕೋಟಿ ರೂಪಾಯಿಗೆ ಹೆಚ್ಚಿಸಲಾಗುವುದು. ಈಗಾಗಲೇ ಸಬ್ಸಿಡಿ ಮೊತ್ತವನ್ನು ಬಿಡುಗಡೆ ಮಾಡಲಾಗಿದ್ದರೂ ಕೆಲವು ಘಟಕಗಳ ಸಬ್ಸಿಡಿ ಬಾಕಿ ಉಳಿದುಕೊಂಡಿದೆ. ಅದನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು~ ಎಂದೂ ಶೆಟ್ಟರ್ ಪ್ರಕಟಿಸಿದರು.
`ರೈತರು ಕೈಗಾರಿಕೆಗಳಿಗೆ ಭೂಮಿ ನೀಡಲು ಸಿದ್ಧವಿದ್ದರೂ ನೋಂದಣಿಗೆ ಈಗಿನ ನಿಯಮಾವಳಿ ಪ್ರಕಾರ 45 ದಿನ ಕಾಯುವುದು ಅನಿವಾರ್ಯವಾಗಿದೆ. ಆ ಅವಧಿಯನ್ನು ಏಳು ದಿನಕ್ಕೆ ಇಳಿಸಲು ಕಾನೂನಿನಲ್ಲಿ ಮಾರ್ಪಾಡು ಮಾಡಲಾಗುವುದು~ ಎಂದು ಅವರು ಪ್ರಕಟಿಸಿದರು.
`ನಮ್ಮ ಸರ್ಕಾರದ ನಾಲ್ಕು ವರ್ಷಗಳ ಅವಧಿಯಲ್ಲಿ 72,355 ಹೊಸ ಘಟಕಗಳು ಸ್ಥಾಪನೆಯಾಗಿವೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಣ್ಣ ಕೈಗಾರಿಕೆಗೆ ಸಂಬಂಧಿಸಿದಂತೆ ರೂ 72,000 ಕೋಟಿ ಮೊತ್ತದ ಒಪ್ಪಂದ ಮಾಡಿಕೊಳ್ಳಲಾಗಿದೆ~ ಎಂದು ಶೆಟ್ಟರ್ ವಿವರಿಸಿದರು.
`ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಕಿಂಗ್ ಫಿಶರ್ ಹುಬ್ಬಳ್ಳಿಗೆ ಸೇವೆ ಸ್ಥಗಿತಗೊಳಿಸಿದ್ದು, ಬೇರೆ ವಿಮಾನಯಾನ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲಾಗುತ್ತಿದೆ. ರನ್ವೇ ವಿಸ್ತರಣೆಯಾದರೆ ಇಂಡಿಯನ್ ಏರ್ಲೈನ್ಸ್ ಸಂಸ್ಥೆಗೂ ವಿಮಾನ ಹಾರಾಟ ಆರಂಭಿಸುವಂತೆ ಕೇಳಿಕೊಳ್ಳಲಾಗುವುದು~ ಎಂದರು.
ಸಣ್ಣ ಕೈಗಾರಿಕಾ ಸಚಿವ ರಾಜೂಗೌಡ, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಸಂಸದೀಯ ಕಾರ್ಯದರ್ಶಿ ಶಂಕರ ಪಾಟೀಲ ಮುನೇನಕೊಪ್ಪ, ಸಂಸದ ಪ್ರಹ್ಲಾದ ಜೋಶಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.