ಮೈಸೂರು: ರಾಜ್ಯದಲ್ಲಿ ಬರ ಇರುವುದರಿಂದ ನಾಡಹಬ್ಬ ದಸರಾವನ್ನು ಈ ಬಾರಿ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿರುವುದಕ್ಕೆ ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದರು.
ರಾಜಕಾರಣಿಗಳು ಮತ್ತು ಅಧಿಕಾರಿಗಳ ಮನಸ್ಸಿಗೆ ಬರ ಬಂದಿದೆ. ಹಣಕ್ಕೆ ಬರ ಇಲ್ಲ. ಎಂದಿನಂತೆ ಸಾಂಸ್ಕೃತಿಕ ದಸರಾವನ್ನು ವಿಜೃಂಭಣೆಯಿಂದ ನಡೆಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.
ನಗರದ ಮೈಸೂರು ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಸರಳ ದಸರಾ ಆಚರಣೆ ಕುರಿತು ಪದಾಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಕಳೆದ 400 ವರ್ಷಗಳಿಂದ ನಿರಂತರವಾಗಿ ದಸರಾವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ದಸರಾ ಸಂದರ್ಭದಲ್ಲಿ ವ್ಯಾಪಾರ ವಹಿವಾಟು ಜೋರಾಗಿ ನಡೆಯುತ್ತದೆ. ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದಾಯ ಬರುತ್ತದೆ. ಬರದ ನೆಪವೊಡ್ಡಿ ಸರಳ ದಸರಾ ಆಚರಣೆಗೆ ಸರ್ಕಾರ ಮುಂದಾಗಿರುವುದಕ್ಕೆ ಒಕ್ಕೊರಲಿನಿಂದ ಆಕ್ಷೇಪ ವ್ಯಕ್ತವಾಯಿತು.
ಹಿಂದೆ ಸರ್ಕಾರ ದಸರಾಕ್ಕೆ ಹಣ ಕೊಡಲು ಹಿಂದೇಟು ಹಾಕಿದಾಗ ನಾಗರಿಕರೇ ಹಣ ಹಾಕಿ 44 ಸ್ತಬ್ಧಚಿತ್ರಗಳ ಮೆರವಣಿಗೆ ಮಾಡಿಸಿದ್ದರು. ದಸರಾ ಗೋಲ್ಡ್ ಕಾರ್ಡ್, ಪ್ರಾಯೋಜಕತ್ವ ನೀಡುವುದರಿಂದಲೇ ದಸರಾ ನಡೆಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.