ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ವು 2011ನೇ ಸಾಲಿನ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ನಡೆಸಿರುವ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳದೆ ಡೋಲಾಯಮಾನ ನಿಲುವನ್ನು ತಾಳಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.
ಆಯ್ಕೆ ಪ್ರಕ್ರಿಯೆ ರದ್ದುಪಡಿಸಿ ರಾಜ್ಯ ಹೈಕೋರ್ಟ್ ಕಳೆದ ಮಾರ್ಚ್ 9ರಂದು ನೀಡಿದ್ದ ಆದೇಶ ಪ್ರಶ್ನಿಸಿ, ಸಿ.ಅವಿನಾಶ್ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆದರ್ಶಕುಮಾರ್
ಗೋಯಲ್ ಹಾಗೂ ಆರ್.ಎಫ್. ನಾರಿಮನ್ ಅವರನ್ನು ಒಳಗೊಂಡ ಪೀಠ ಸರ್ಕಾರದ ನಿಲುವಿಗೆ ಅಚ್ಚರಿ ವ್ಯಕ್ತಪಡಿಸಿದೆ.
ಆಯ್ಕೆ ಪ್ರಕ್ರಿಯೆ ಅಕ್ರಮದಿಂದ ಕೂಡಿದೆ ಎಂದು ಸಿಐಡಿ ತನಿಖಾ ವರದಿ ಸಲ್ಲಿಸಿದ ಕೂಡಲೇ ನೇಮಕಾತಿ ಅಧಿಸೂಚನೆಯನ್ನೇ ರದ್ದುಗೊಳಿಸಿದ್ದ ಸರ್ಕಾರ, ನಂತರ 2016ರ ಅಕ್ಟೋಬರ್ 19ರಂದು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ನೀಡಿದ್ದ ನಿರ್ದೇಶನದ ಮೇರೆಗೆ ನೇಮಕಾತಿ ಆದೇಶ ನೀಡಿದೆ. ಆಯ್ಕೆ ಪ್ರಕ್ರಿಯೆಯನ್ನು ರದ್ದುಗೊಳಿಸಿ ಹೈಕೋರ್ಟ್ ತೀರ್ಪು ನೀಡಿದ ಬಳಿಕ ಇದೀಗ ವಿಶೇಷ ಮೇಲ್ಮನವಿ ಸಲ್ಲಿಸಿದೆ ಎಂದು ನ್ಯಾಯಮೂರ್ತಿ ಗೋಯಲ್ ಹೇಳಿದರು.
ಕೆಎಟಿ ಆದೇಶದ ಮೇರೆಗೆ ಪ್ರಜ್ಞಾಪೂರ್ವಕ ನಿರ್ಧಾರ ಕೈಗೊಂಡ ಸರ್ಕಾರ ನೇಮಕಾತಿ ಆದೇಶ ನೀಡಿತ್ತು ಎಂದು ಹೆಚ್ಚುವರಿ ಅಡ್ವೋಕೇಟ್ ಜನರಲ್ ದೇವದತ್ತ ಕಾಮತ್ ನ್ಯಾಯಪೀಠಕ್ಕೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.