ADVERTISEMENT

ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2013, 19:59 IST
Last Updated 3 ಜುಲೈ 2013, 19:59 IST

ನರಗುಂದ (ಗದಗ ಜಿಲ್ಲೆ):  ಉತ್ತರಾಖಂಡ ಪ್ರವಾಹದ ಸಂತ್ರಸ್ತರ ರಕ್ಷಣೆಗೆ ತೆರಳಿದ್ದ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ ಯೋಧ ಬಸವರಾಜ ಯರಗಟ್ಟಿ ಅವರ ಅಂತ್ಯಕ್ರಿಯೆ ಬುಧವಾರ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ತಾಲ್ಲೂಕಿನ ಜಗಾಪುರದಲ್ಲಿ ನಡೆಯಿತು.

ಮುಂಬೈ ಮೂಲಕ ಆಗಮಿಸಿದ ಶವಪೆಟ್ಟಿಗೆಯನ್ನು ನರಗುಂದದಲ್ಲಿ ಮೆರವಣಿಗೆ ನಡೆಸಿದ ನಂತರ ನೇರವಾಗಿ ಜಗಾಪುರ ಗ್ರಾಮಕ್ಕೆ ತರಲಾಯಿತು. ನಂತರ ಗ್ರಾಮದಲ್ಲಿ ಮೆರವಣಿಗೆ ನಡೆಸಿ, ಶವದ ಪೆಟ್ಟಿಗೆಯನ್ನು ಬಸವರಾಜ ಕುಟುಂಬದ ಸದಸ್ಯರಿಗೆ ಒಪ್ಪಿಸಲಾಯಿತು.

ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಯಿತು.ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ, ಶಾಸಕ ಬಿ.ಆರ್.ಯಾವಗಲ್, ಮಾಜಿ ಶಾಸಕ ಡಿ.ಆರ್.ಪಾಟೀಲ, ಭೈರನಹಟ್ಟಿಯ ಶಾಂತಲಿಂಗ ಸ್ವಾಮೀಜಿ, ಗುರುಸಿದ್ಧವೀರ ಶಿವಯೋಗಿ ಶಿವಾಚಾರ್ಯರು, ಜಿಲ್ಲಾಧಿಕಾರಿ ಅಂಜನ್ ಕುಮಾರ ಮುಂತಾದ ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ರೂ 10 ಲಕ್ಷ ಚೆಕ್ ವಿತರಣೆ
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಜಗಾಪುರದ ಹುತಾತ್ಮ ಯೋಧ ಬಸವರಾಜ ಯರಗಟ್ಟಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 10 ಲಕ್ಷ ಪರಿಹಾರ ಚೆಕ್ ವಿತರಿಸಿದರು.

`ಅಪಘಾತದಲ್ಲಿ ಮೃತಪಟ್ಟವರ 20 ಮಂದಿ ಪೈಕಿ ಇಬ್ಬರ ಶವ ಸಿಕ್ಕಿಲ್ಲ. ರಕ್ಷಣಾ ಅಧಿಕಾರಿಗಳು ಆರು ದಿನ ಶ್ರಮ ವಹಿಸಿ ಹುಡುಕಿದರೂ ಪತ್ತೆಯಾಗಿಲ್ಲ. ಧೈರ್ಯ ಕಳೆದುಕೊಳ್ಳಬೇಡಿ' ಎಂದು ಕುಂಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಬಳಿಕ  ಮಾತನಾಡಿದ ಸಚಿವರು, `ಯೋಧನ ಸಹೋದರಿ ಮಂಜುಳಾ ಅಂಗವಿಕಲೆಯಾಗಿದ್ದು, ಅವರಿಗೆ ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಪರಿಶೀಲನೆ ನಡೆಸಿ ತಿಂಗಳೊಳಗೆ ತೀರ್ಮಾನ ಕೈಗೊಳ್ಳಲಾಗುವುದು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT