ಬೆಂಗಳೂರು: ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರು ಕರ್ತವ್ಯದ ಅವಧಿಯಲ್ಲಿ ಸರ್ಕಾರದ ಘನತೆಗೆ ಧಕ್ಕೆ ತಾರದಂತಹ ಸಭ್ಯ ಉಡುಪುಗಳನ್ನು ಮಾತ್ರ ಧರಿಸಬೇಕು ಎಂದು ಸೂಚಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಸುತ್ತೋಲೆ ಹೊರಡಿಸಿದೆ.
ಹೊಸದಾಗಿ ಸೇವೆಗೆ ಸೇರಿರುವ ಬಹುತೇಕ ಕಿರಿಯ ನೌಕರರು ಕರ್ತವ್ಯದ ಅವಧಿಯಲ್ಲಿ ಧರಿಸುವ ಉಡುಪುಗಳು ಶೋಭೆ ತರುವಂತಿರುವುದಿಲ್ಲ ಎಂದು ರಾಜ್ಯ ಸರ್ಕಾರದ ಸಚಿವಾಲಯದ ನೌಕರರ ಸಂಘ ಆಕ್ಷೇಪ ಎತ್ತಿತ್ತು. ಸರ್ಕಾರಿ ನೌಕರರು ಮತ್ತು ಅಧಿಕಾರಿಗಳಿಗೆ ‘ವಸ್ತ್ರ ಸಂಹಿತೆ’ ಜಾರಿಗೊಳಿಸುವಂತೆಯೂ ಮನವಿ ಸಲ್ಲಿಸಿತ್ತು. ಅದನ್ನು ಆಧರಿಸಿ ಸುತ್ತೋಲೆ ಹೊರಡಿಸಿರುವ ಇಲಾಖೆ, ‘ವಸ್ತ್ರ ಸಂಹಿತೆ’ ಪಾಲಿಸುವಂತೆ ಸೂಚನೆ ನೀಡಿದೆ.
‘ಸರ್ಕಾರದಲ್ಲಿ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ನೌಕರರು ಸರ್ಕಾರದ ಘನತೆಗೆ ಧಕ್ಕೆ ಬಾರದಂತಹ ಮತ್ತು ಶೋಭೆ ತರುವಂತಹ ಸಭ್ಯ ಉಡುಪನ್ನೇ ಧರಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಈ ಕಾರಣದಿಂದ ಎಲ್ಲರೂ ಸಭ್ಯ ಉಡುಪುಗಳನ್ನೇ ಧರಿಸಿ ಕಚೇರಿ ಕೆಲಸಕ್ಕೆ ಹಾಜರಾಗಬೇಕು’ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಈ ಕುರಿತು ‘ಪ್ರಜಾವಾಣಿ’ ಜೊತೆ ಮಾತನಾಡಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು, ‘ಅಧಿಕಾರಿಗಳು ಮತ್ತು ನೌಕರರಿಗೆ ವಸ್ತ್ರ ಸಂಹಿತೆ ನಿಗದಿ ಮಾಡಬೇಕು ಎಂದು ಸಚಿವಾಲಯ ನೌಕರರ ಸಂಘ ಮನವಿ ಸಲ್ಲಿಸಿತ್ತು. ಅಲ್ಲದೇ ಸರ್ಕಾರಿ ಸೇವೆಯಲ್ಲಿರುವವರು ಸಭ್ಯ ಉಡುಗೆ ಧರಿಸಿ ಕಚೇರಿಗೆ ಹಾಜರಾಗಬೇಕಾದುದು ಅವರ ಕರ್ತವ್ಯ.
ಈ ಕಾರಣಕ್ಕಾಗಿಯೇ ಸುತ್ತೋಲೆ ಹೊರಡಿಸಲಾಗಿದೆ’ ಎಂದರು. ಎಲ್ಲ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಈ ಸುತ್ತೋಲೆರವಾನಿಸಿದ್ದು, ‘ವಸ್ತ್ರ ಸಂಹಿತೆ’ ಜಾರಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.