ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಘೋಷಣೆ ಆಗಿರುವುದರಿಂದ ಗೃಹ ಇಲಾಖೆ ಸಲಹೆಗಾರ ಕೆಂಪಯ್ಯ ಸೇರಿದಂತೆ ಮುಖ್ಯಮಂತ್ರಿ ಅಥವಾ ಇತರ ಸಚಿವರಿಗೆ ನೇಮಕಗೊಂಡಿರುವ ರಾಜಕೀಯ ಮತ್ತು ಇತರ ಸಲಹೆಗಾರರು ಮುಂದುವರಿಯುವಂತಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.
ಕೆಂಪಯ್ಯ ಸಲಹೆಗಾರರಾಗಿ ಇನ್ನೂ ಮುಂದುವರಿದಿರುವ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿರುವುದನ್ನು ಅವರ ಗಮನಕ್ಕೆ ತಂದಾಗ, ‘ರಾಜಕೀಯ ಮತ್ತು ಇತರ ರೀತಿಯ ಸಲಹೆಗಾರರು ಮುಂದುವರಿಯುವಂತಿಲ್ಲ. ಆ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇನೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪೊಲೀಸ್ ಇಲಾಖೆ ಅಧಿಕಾರಿಗಳು ಹಸ್ತಕ್ಷೇಪ ಇಲ್ಲದೆ ಕರ್ತವ್ಯ ನಿರ್ವಹಿಸಲು ಕೆಂಪಯ್ಯ ಅಡ್ಡಿ ಆಗಿದ್ದಾರೆ ಎಂದು ಬಿಜೆಪಿ ಮತ್ತು ಜೆಡಿಎಸ್ ದೂರಿದ್ದವು.
ಕುಲಪತಿಗಳ ನೇಮಕ ಬಗ್ಗೆ ತನಿಖೆ: ನೀತಿ ಸಂಹಿತೆ ಜಾರಿ ಆದ ಬಳಿಕ ಯಾವುದೇ ಹುದ್ದೆಗಳಿಗೆ ನೇಮಕ ಮಾಡುವಂತಿಲ್ಲ. ತರಾತುರಿಯಲ್ಲಿ ಎರಡು ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕದ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ತನಿಖೆ ಮಾಡಿಸುತ್ತೇನೆ. ರಾಜ್ಯಪಾಲರೂ ನೇಮಕಾತಿ ಸಂಬಂಧ ಆದೇಶ ಹೊರಡಿಸುವಂತಿಲ್ಲ ಎಂದು ಅವರು ಹೇಳಿದರು.
ಚಿಕ್ಕಬಳ್ಳಾಪುರದಲ್ಲಿ ನೀತಿ ಸಂಹಿತೆ ಜಾರಿ ಬಂದ ಬಳಿಕ ಬಾಡೂಟ ಹಾಕಿಸಿದ ಪ್ರಕರಣ, ಹೊನ್ನಾವರದಲ್ಲಿ ಯಾವುದೇ ದಾಖಲೆ ಇಲ್ಲದೆ ₹7 ಲಕ್ಷ ನಗದು ಸಾಗಿಸಿರುವುದು ಮತ್ತು ದೇವರ ಹಿಪ್ಪರಗಿಯಲ್ಲಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ವಿಷಯ ಆಯೋಗದ ಗಮನಕ್ಕೆ ಬಂದಿದೆ. ಪ್ರಕರಣ ದಾಖಲಿಸಿಕೊಂಡು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.
ರಾಜ್ಯ ಸರ್ಕಾರ ಕಳೆದ ಎರಡು ಸಚಿವ ಸಂಪುಟ ಸಭೆಗಳಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿರುವುದನ್ನು ಅವರ ಗಮನಕ್ಕೆ ತಂದಾಗ, ಈ ಬಗ್ಗೆ ನಿರ್ದಿಷ್ಟ ದೂರುಗಳು ಬಂದರೆ ಕ್ರಮ ತೆಗೆದುಕೊಳ್ಳಬಹುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.