ADVERTISEMENT

ಸವಿತಾ ಅಭಿವೃದ್ದಿ ನಿಗಮ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2017, 19:30 IST
Last Updated 17 ಅಕ್ಟೋಬರ್ 2017, 19:30 IST
ಸವಿತಾ ಅಭಿವೃದ್ದಿ ನಿಗಮ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ
ಸವಿತಾ ಅಭಿವೃದ್ದಿ ನಿಗಮ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ   

ಬೆಂಗಳೂರು: ‘ಸಮಾಜದ ಅಭಿವೃದ್ಧಿಗಾಗಿ ಪ್ರತ್ಯೇಕವಾಗಿ ಸವಿತಾ ಸಮಾಜ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು’ ಎಂದು ಒತ್ತಾಯಿಸಿ ಸಮುದಾಯದ ನೂರಾರು ಮಂದಿ ಪುರಭವನದ ಮುಂದೆ ಮಂಗಳವಾರ ಪ್ರತಿಭಟನೆ ಮಾಡಿದರು.

ಸವಿತಾ ಸಮಾಜದ ರಾಜ್ಯಾಧ್ಯಕ್ಷ ಯು.ಕೃಷ್ಣಮೂರ್ತಿ, ಕಡಿಮೆ ಪ್ರತಿಫಲ ಪಡೆದು ಸೇವಾಮನೋಭಾವದಿಂದ ಕ್ಷೌರ ಮಾಡುತ್ತಿದ್ದೇವೆ. ಇತ್ತೀಚೆಗೆ ಆದಂತಹ ಸಾಮಾಜಿಕ ಪರಿವರ್ತನೆ, ಜಾಗತಿಕರಣ ಹಾಗೂ ಉದಾರಿಕರಣದಂಥ ಕ್ಷಿಪ್ರ ಬೆಳವಣಿಗೆಗಳಿಂದ ನಾವು ಸಾಮಾಜಿಕ ದಬ್ಬಾಳಿಕೆಗೆ ತುತ್ತಾಗಿದ್ದೇವೆ. ಆರ್ಥಿಕವಾಗಿ ಹಿಂದುಳಿಯಲು ಇದೇ ಮೂಲ ಕಾರಣ ಎಂದರು.

ನಮ್ಮದಲ್ಲದ ತಪ್ಪಿಗೆ ಸಾಮಾಜಿಕವಾಗಿ ನಾವು ಅವಹೇಳನಕ್ಕೆ ಗುರಿಯಾಗುತ್ತಿದ್ದೇವೆ. ಅಸಹಾಯಕತೆಯಿಂದ ಮಾನಸಿಕವಾಗಿ ಕುಗ್ಗಿದ್ದೇವೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ADVERTISEMENT

’ಕ್ಷೌರ ವೃತ್ತಿ ನಮ್ಮ ಕುಲಕಸುಬು. ಆದರೆ, ಬಹು ರಾಷ್ಟ್ರೀಯ ಕಂಪೆನಿಗಳ ಮಾಲೀಕರು ಹಾಗೂ ಬಂಡವಾಳಶಾಹಿಗಳು ನಗರ ಪ್ರದೇಶಗಳಲ್ಲಿ ದೊಡ್ಡ ದೊಡ್ಡ ಅಂಗಡಿಗಳನ್ನು ತೆರೆದು ಕ್ಷೌರ ವೃತ್ತಿಯನ್ನು ವ್ಯಾಪಾರೀಕರಣ ಮಾಡಿದ್ದಾರೆ. ಜನರಿಂದ ಹೆಚ್ಚಿನ ಹಣ ದೋಚುತ್ತಿದ್ದಾರೆ. ಇದರಿಂದ ಕುಲಕಸುಬುದಾರರಿಗೆ ಹೊಡೆತ ಬೀಳುತ್ತಿದೆ’ ಎಂದು ಆರೋಪಿಸಿದರು.

ಸವಿತಾ ಸಮಾಜ 2ಎ ಕೆಟಗರಿ ವ್ಯಾಪ್ತಿಗೆ ಬರುತ್ತದೆ. ಇದರಿಂದ ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಪ್ರಬಲವಾಗಿರುವ ಸಮುದಾಯದವರೊಂದಿಗೆ ಪೈಪೋಟಿ ನಡೆಸಲು ಸಾಧ್ಯವಾಗುತ್ತಿಲ್ಲ ಎಂದರು.

ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಎಂ.ಡಿ.ಲಕ್ಷೀನಾರಾಯಣ್ ಅವರು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ನಿಮ್ಮ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರುವುದಾಗಿ ಅವರು ಹೇಳಿದರು.

ಇದಕ್ಕೂ ಮೊದಲು ಪುರಭವನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರ‍್ಯಾಲಿ ನಡೆಸಿದ ಸಮುದಾಯದ ಸಾವಿರಾರು ಜನರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.