ADVERTISEMENT

ಸಾರಿಗೆ ಬಸ್‌ಗೆ ಕಲ್ಲು, ಲಾಠಿ ಪ್ರಹಾರ: ಸತೀಶ ಜಾರಕಿಹೊಳಿ ಬೆಂಬಲಿಗರ ಬಂಧನ

​ಪ್ರಜಾವಾಣಿ ವಾರ್ತೆ
Published 7 ಜೂನ್ 2018, 13:34 IST
Last Updated 7 ಜೂನ್ 2018, 13:34 IST
ಸಾರಿಗೆ ಬಸ್‌ಗೆ ಕಲ್ಲು, ಲಾಠಿ ಪ್ರಹಾರ: ಸತೀಶ ಜಾರಕಿಹೊಳಿ ಬೆಂಬಲಿಗರ ಬಂಧನ
ಸಾರಿಗೆ ಬಸ್‌ಗೆ ಕಲ್ಲು, ಲಾಠಿ ಪ್ರಹಾರ: ಸತೀಶ ಜಾರಕಿಹೊಳಿ ಬೆಂಬಲಿಗರ ಬಂಧನ   

ಬೆಳಗಾವಿ: ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದ ವೇಳೆ ನಗರ ಸಾರಿಗೆ ಬಸ್‌ಗೆ ಕಲ್ಲು ತೂರಿದ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ಕಾರ್ಯಕರ್ತರ ಮೇಲೆ ಪೊಲೀಸರು ಲಘು ಲಾಠಿಪ್ರಹಾರ ನಡೆಸಿದರು. 20 ಮಂದಿಯನ್ನು ಬಂಧಿಸಿದರು.

ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ನಡೆದ ಘಟನೆಯಲ್ಲಿ ಬಸ್‌ನ ಮುಂಭಾಗ ಹಾಗೂ ಹಿಂಭಾಗದ ಗಾಜುಗಳು ಪುಡಿಯಾಗಿವೆ.

ವೇದಿಕೆ ರಾಜ್ಯಾಧ್ಯಕ್ಷ ವಿಜಯ ತಳವಾರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅರೆಬೆತ್ತಲೆಯಾಗಿ, ಹಳೆಯ ಮೂರು ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು, ಕಾಂಗ್ರೆಸ್‌ ಪಕ್ಷದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ‘ಹಿರಿಯ ನಾಯಕನನ್ನು ಕಡೆಗಣಿಸುವ ಮೂಲಕ ಸಮಾಜಕ್ಕೆ ಅವಮಾನ ಮಾಡಲಾಗಿದೆ’ ಎಂದು ದೂರಿದರು.

ADVERTISEMENT

ಬಸ್‌ಗೆ ಕಲ್ಲು ತೂರಿ, ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದರು. ಅವರನ್ನು ಚದುರಿಸಲು ಪೊಲೀಸರು ಲಘು ಲಾಠಿಪ್ರಹಾರ ನಡೆಸಿದರು.

ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‌ಇದಕ್ಕೂ ಮುನ್ನ ಪ್ರತ್ಯೇಕವಾಗಿ ಪ್ರತಿಭಟಿಸಿದ್ದ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತರು, ಕ್ಲಬ್‌ ರಸ್ತೆಯಲ್ಲಿರುವ ಕಾಂಗ್ರೆಸ್‌ ಕಚೇರಿ ಬಳಿಯ ಹೂಕುಂಡಗಳನ್ನು ಒಡೆದು ಹಾಕಿದ್ದರು. ಬ್ಯಾನರ್‌ಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.