ADVERTISEMENT

ಸಿ.ಎಂ ವಿವೇಚನೆಗೆ ಬಿಟ್ಟದ್ದು

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2011, 19:30 IST
Last Updated 8 ಅಕ್ಟೋಬರ್ 2011, 19:30 IST

ಬೆಂಗಳೂರು: `ಮೆಗಾಸಿಟಿ~ ನಿವೇಶನ ಹಂಚಿಕೆ ಹಗರಣದ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಸಿ.ಪಿ. ಯೋಗೀಶ್ವರ್ ಅವರನ್ನು ಸಂಪುಟದಲ್ಲಿ ಉಳಿಸಿಕೊಳ್ಳುವುದು ಅಥವಾ ಕೈಬಿಡುವುದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ವಿವೇಚನೆಗೆ ಬಿಟ್ಟ ವಿಚಾರ ಎಂದು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಹೇಳಿದರು.

ಭಾರತೀಯ ವಾಯುಸೇನೆಯ 79ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಶನಿವಾರ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, `ಸಚಿವ ಸಂಪುಟದ ಸದಸ್ಯರ ವಿರುದ್ಧ ಆರೋಪ ಕೇಳಿಬಂದಾಗ ಅದನ್ನು ಸಿ.ಎಂಗೆ ತಿಳಿಸುವುದು ನನ್ನ ಜವಾಬ್ದಾರಿ. ಯೋಗೀಶ್ವರ್ ವಿರುದ್ಧ ಕೇಳಿಬಂದಿರುವ ಆರೋಪ ಕುರಿತೂ ಅವರಿಗೆ ಮಾಹಿತಿ ನೀಡಿದ್ದೇನೆ.

`ಯೋಗೀಶ್ವರ್ ಇತ್ತೀಚೆಗೆ ನನ್ನನ್ನು ಭೇಟಿ ಮಾಡಿದ್ದಾಗಲೂ ಅವರ ವಿರುದ್ಧ ಇರುವ ಆರೋಪಗಳ ಕುರಿತು ವಿವರಿಸಿದ್ದೇನೆ. ಯೋಗೀಶ್ವರ್ ಅವರನ್ನು ಸಚಿವರನ್ನಾಗಿ ನೇಮಕ ಮಾಡಿದ್ದು ನಾನಲ್ಲ. ಸಂವಿಧಾನದ ಚೌಕಟ್ಟಿನಲ್ಲಿ ಸಾಧ್ಯವಿರುವುದನ್ನು ನಾನು ಮಾಡಿದ್ದೇನೆ~ ಎಂದು ಸ್ಪಷ್ಟನೆ ನೀಡಿದರು.

ಲೋಕಾಯುಕ್ತರ ನೇಮಕ: `ನೂತನ ಲೋಕಾಯುಕ್ತರ ನೇಮಕ ಕುರಿತಂತೆ ಸರ್ಕಾರದಿಂದ ಯಾವುದೇ ಪತ್ರ ಬಂದಿಲ್ಲ. ಈ ಹುದ್ದೆಗೆ ನ್ಯಾಯಮೂರ್ತಿಗಳಾದ ಎಸ್.ಆರ್. ಬನ್ನೂರುಮಠ ಮತ್ತು ಎನ್.ಕೆ. ಸೋಧಿ ಅವರ ಹೆಸರು ಪ್ರಸ್ತಾಪವಾಗಿದೆ ಎಂಬುದನ್ನು ಮಾಧ್ಯಮಗಳಲ್ಲಿ ಓದಿದ್ದೇನೆ. ಅವರ ಹೆಸರು ಲೋಕಾಯುಕ್ತ ಹುದ್ದೆಗೆ ಹೇಗೆ ಕೇಳಿಬಂತು ಎಂಬುದು ಗೊತ್ತಾಗುತ್ತಿಲ್ಲ~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.