ADVERTISEMENT

ಸಿದ್ದರಾಮಯ್ಯ ಸರ್ವಾಧಿಕಾರಿ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 2 ಜೂನ್ 2013, 19:59 IST
Last Updated 2 ಜೂನ್ 2013, 19:59 IST

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಈಚೆಗೆ ಹಲವು ಯೋಜನೆಗಳನ್ನು ಅವುಗಳ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸದೆ ಘೋಷಿಸಿದ್ದು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಕೆಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.

ಹಣಕಾಸಿನ ಸ್ಥಿತಿ ನೋಡಿಕೊಳ್ಳದೆ ಅವಸರ ಮತ್ತು ತರಾತುರಿಯಲ್ಲಿ ಕಾರ್ಯಕ್ರಮಗಳನ್ನು ಘೋಷಣೆ ಮಾಡುತ್ತಿದ್ದಾರೆ. ಇದಕ್ಕೆ ಅವರ ಸಂಪುಟದ ಬಹಳಷ್ಟು ಸದಸ್ಯರಿಗೆ ಅಸಮಾಧಾನವಿದೆ ಎಂದು ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನವೇ ್ಙ 6 ಸಾವಿರ ಕೋಟಿ ಆರ್ಥಿಕ ಹೊರೆ ಬೀಳುವ ಕಾರ್ಯಕ್ರಮ  ಘೋಷಣೆ  ಮಾಡಿದರು.  ಇಂತಹ  ಜನಪ್ರಿಯ  ಕಾರ್ಯಕ್ರಮಗಳನ್ನು ನಾನು  ವಿರೋಧಿಸುವುದಿಲ್ಲ. ಆದರೆ, ಅಕ್ಕಿ ವಿತರಣೆಯಂತಹ ಯೋಜನೆಯನ್ನು ಪದೇಪದೇ ಬದಲಾವಣೆ ಮಾಡುವುದು ಜನರಲ್ಲಿ ಗೊಂದಲ ಸೃಷ್ಟಿಸಿದೆ ಎಂದರು.

ಉಡುಪಿ ಶ್ರೀಕೃಷ್ಣಮಠ, ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಗಳನ್ನು ಮುಜರಾಯಿ ಇಲಾಖೆಗೆ ಸೇರಿಸುವ ಪ್ರಸ್ತಾಪ ಮಾಡಿದ್ದಾರೆ. ಹಾಗೆಯೇ, ಏಕಾಏಕಿ ಗುಟ್ಕಾ ನಿಷೇಧಕ್ಕೆ ಮುಂದಾಗಿದ್ದಾರೆ. ಈ ಕಾರ್ಯಕ್ರಮಗಳು ಅವರ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಇರಲಿಲ್ಲ ಎಂದು ದೂರಿದರು.

ಒಂದು ಕಡೆ ಅಗ್ಗದ ಮದ್ಯ ಬಗ್ಗೆ ಮಾತನಾಡುತ್ತಾರೆ; ಮತ್ತೊಂದು ಕಡೆ ಜನರ ಆರೋಗ್ಯದ ದೃಷ್ಟಿಯಿಂದ ಗುಟ್ಕಾ ನಿಷೇಧಿಸಿದ್ದೇವೆ ಎನ್ನುತ್ತಾರೆ. ಬಿಜೆಪಿ ಸರ್ಕಾರದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿತ್ತು ಎನ್ನುವ ಸಿದ್ದರಾಮಯ್ಯ, ಇನ್ನೊಂದು ಕಡೆ ರಾಜ್ಯದ ಆರ್ಥಿಕ ಸ್ಥಿತಿ ಸದೃಢವಾಗಿರುವುದರಿಂದಲೇ ಇಷ್ಟೆಲ್ಲ ಯೋಜನೆಗಳನ್ನು ಘೋಷಣೆ ಮಾಡಲಾಯಿತು ಎನ್ನುತ್ತಾರೆ. ಒಂದು ರೀತಿ ದ್ವಂದ್ವ ಮತ್ತು ತದ್ವಿರುದ್ಧ ಚಿಂತನೆ ಅವರಲ್ಲಿದೆ ಎಂದು ಯಡಿಯೂರಪ್ಪ ಟೀಕಿಸಿದರು.

ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತರು ನಿರಂತರವಾಗಿ ಆತಂಕದಲ್ಲಿದ್ದರು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, `ಯಾವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಉಸಿರುಕಟ್ಟುವ ವಾತಾವರಣದಲ್ಲಿದ್ದರು ಎಂಬುದನ್ನು ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು. ಇಂತಹ ಬೇಜವಾಬ್ದಾರಿ ಹೇಳಿಕೆ ನೀಡಬಾರದು' ಎಂದು ಎಚ್ಚರಿಕೆ ನೀಡಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೊರತುಪಡಿಸಿ, ಸಮಾನ ಮನಸ್ಕರೊಂದಿಗೆ ಕೆಜೆಪಿ ಹೊಂದಾಣಿಕೆ ಮಾಡಿಕೊಳ್ಳಲಿದೆ. ಆದರೆ ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ಥಳೀಯ ಪರಿಸ್ಥಿತಿ ಅವಲೋಕಿಸಿ, ಅದಷ್ಟು ಬಿಜೆಪಿ ಹೊರತುಪಡಿಸಿ ಉಳಿದ ಪಕ್ಷಗಳ ಜತೆ ಕೈಜೋಡಿಸಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.