ಚಿತ್ರದುರ್ಗ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳವಾರ ತಾಲ್ಲೂಕಿನ ಸಿರಿಗೆರೆಯ ತರಳಬಾಳು ಮಠಕ್ಕೆ ಭೇಟಿ ನೀಡಿ ಪೀಠಾಧ್ಯಕ್ಷ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.
ಮಧ್ಯಾಹ್ನ 1:37ಕ್ಕೆ ಸಿರಿಗೆರೆ ಕಾಲೇಜು ಮೈದಾನದ ಹೆಲಿಪ್ಯಾಡ್ಗೆ ಬಂದಿಳಿದ ಅಮಿತ್ ಶಾ ಅವರನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಎಸ್.ನವೀನ್, ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ಸೇರಿದಂತೆ ಬಿಜೆಪಿ ಮುಖಂಡರು ಸ್ವಾಗತಿಸಿದರು.
ಅಮಿತ್ ಶಾ ಮೈದಾನದಲ್ಲಿ ಸೇರಿದ್ದ ಅಭಿಮಾನಿಗಳು, ಕಾರ್ಯಕರ್ತರತ್ತ ಕೈಬೀಸಿದರು.
ಸಿರಿಗೆರೆ ಶ್ರೀಗಳೊಂದಿಗೆ ಮುಕ್ಕಾಲು ತಾಸು ಮಾತಕತೆ ನಡೆಸಿದ ಅಮಿತ್ ಶಾ ರಸ್ತೆ ಮಾರ್ಗವಾಗಿ ಮಾದಾರ ಚನ್ನಯ್ಯ ಗುರುಪೀಠಕ್ಕೆ ತೆರಳಿದರು.
ಶಾ ಭೇಟಿಗೆ ನೂಕು ನುಗ್ಗಲು
(ಮಾದಾರ ಚನ್ನಯ್ಯ ಗುರುಪೀಠದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ)
ಚಿತ್ರದುರ್ಗ: ನಗರದ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿಗೆ ನೂಕುನುಗ್ಗಲು ಉಂಟಾಯಿತು.
ಕುಂಚಿಟಿಗ ಮಹಾ ಸಂಸ್ಥಾನ, ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿಗಳು, ಕನಕಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿಗಳೊಂದಿಗೆ ಅಮಿತ್ ಶಾ ಮಾತುಕತೆ ನಡೆಸಿದರು.
ಮಾದರಿ ಅನುಭವ ಮಂಟಪದಲ್ಲಿರುವ ಅಲ್ಲಮಪ್ರಭು ಮತ್ತಿತರ ಶರಣರ ಪ್ರತಿಕೃತಿಗಳಿಗೆ ಪುಷ್ಪನಮನ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಮಾಜಿ ಸಚಿವ ಗೋವಿಂದ ಕಾರಜೋಳ, ಕೇಂದ್ರ ಸಚಿವ ರಮೇಶ್ ಜಿಗಜಿಣಗಿ, ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಸಂಸದರಾದ ಪ್ರಹ್ಲಾದ ಜೋಷಿ, ಜಿ.ಎಂ.ಸಿದ್ದೇಶ್ವರ್, ಶ್ರೀರಾಮುಲು, ರಾಜ್ಯ ಉಸ್ತುವಾರಿ ಮುರುಳಿಧರ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಭಾಗಿಯಾದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.