ADVERTISEMENT

`ಸುಪ್ರೀಂ' ನಿರ್ದೇಶನ; 'ಕಾವೇರಿ'ದ ಸದನ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2013, 10:37 IST
Last Updated 7 ಫೆಬ್ರುವರಿ 2013, 10:37 IST
`ಸುಪ್ರೀಂ' ನಿರ್ದೇಶನ; 'ಕಾವೇರಿ'ದ ಸದನ
`ಸುಪ್ರೀಂ' ನಿರ್ದೇಶನ; 'ಕಾವೇರಿ'ದ ಸದನ   

ಬೆಂಗಳೂರು (ಪಿಟಿಐ): ಕೂಡಲೇ ತಮಿಳುನಾಡಿಗೆ 2.44 ಟಿಎಂಸಿ ಕಾವೇರಿ ನೀರು ಹರಿಸುವಂತೆ ಗುರುವಾರ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ನೀಡಿದ ನಿರ್ದೇಶನದ ಸುದ್ಧಿ ತಿಳಿಯುತ್ತಿದ್ದಂತೆ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆಗಿಳಿದ ಪರಿಣಾಮ ವಿಧಾನಸಭೆಯ ಕಲಾಪದಲ್ಲಿ ಕೆಲಕಾಲ ಕಾವೇರಿದ ವಾತಾವರಣ ನಿರ್ಮಾಣವಾಗಿತ್ತು.

ಕೆರಳಿದ ಪ್ರತಿಪಕ್ಷದ ಸದಸ್ಯರಿಗೆ ಕೋರ್ಟ್‌ನ ನಿರ್ದೇಶನ ಕುರಿತಂತೆ ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಭರವಸೆ ನೀಡುವ ಮೂಲಕ ಪರಿಸ್ಥಿತಿ ನಿಭಾಯಿಸಿತು.

ಯಾವುದೇ ಕಾರಣಕ್ಕೂ ಸರ್ಕಾರ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಸದನ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ಇಂದೇ (ಗುರುವಾರ) ದೆಹಲಿ ತೆರಳಿ ಮುಂದಿನ ಕಾನೂನು ಹೋರಾಟ ಕುರಿತಂತೆ ವಕೀಲರ ಜತೆ ಚರ್ಚೆ ನಡೆಸುವುದಾಗಿ ತಿಳಿಸಿದರು.

ಕಾವೇರಿ ಜಲಾನಯನ ಪ್ರದೇಶದ ರೈತರ ರಕ್ಷಣೆಯ ಹಿತದೃಷ್ಟಿಯಿಂದ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಶೆಟ್ಟರ್ ಹೇಳಿದರು.

ಇದೇ ವೇಳೆ ರಾಜ್ಯದ ಕುಡಿಯುವ ನೀರು ಹಾಗೂ ಬರದ ಪರಿಸ್ಥಿತಿಯನ್ನು ಕೋರ್ಟ್‌ಗೆ ಸರಿಯಾಗಿ ಮನವರಿಕೆ ಮಾಡಿಕೊಡದ ವಕೀಲರನ್ನು ಬದಲಾಯಿಸಬೇಕೆಂಬ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬೇಡಿಕೆಯನ್ನು ಶೆಟ್ಟರ್ ತಳ್ಳಿಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.