ADVERTISEMENT

ಸೂಚನಾ ಪತ್ರ ದುರ್ಬಳಕೆ: ಶಾಸಕರು ಕೆಂಡಾಮಂಡಲ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2012, 19:30 IST
Last Updated 19 ಮಾರ್ಚ್ 2012, 19:30 IST

ಬೆಂಗಳೂರು: ಪಕ್ಷದ ಅಧಿಕೃತ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗಾಗಿ ಶಾಸಕರು ಸಹಿ ಮಾಡಿದ್ದ ಸೂಚನಾ ಪತ್ರವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೆರೆಮರೆಯಲ್ಲಿ ಬಿ.ಜೆ.ಪುಟ್ಟಸ್ವಾಮಿ ಅವರಿಗೆ ನೀಡಿ ಬಂಡಾಯ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿರುವುದು ಶಾಸಕರ ಕೆಂಗಣ್ಣಿಗೆ ಗುರಿಯಾಗಿದೆ.

ಬಿಜೆಪಿಯ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ ವಿಳಂಬವಾದ ಹಿನ್ನೆಲೆಯಲ್ಲಿ ಉಮೇದುವಾರಿಕೆ ಸೂಚಿಸಲು ಶಾಸಕರಿಂದ ಮೊದಲೇ ಸಹಿ ಪಡೆದು, ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಯಡಿಯೂರಪ್ಪ ಅವರ ಜೊತೆ ರೆಸಾರ್ಟ್‌ಗೆ ತೆರಳಿದ್ದ ಶಾಸಕರೂ ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಬೆಂಬಲಿಸಿ ಸೂಚನಾ ಪತ್ರಕ್ಕೆ ಮೊದಲೇ ಸಹಿ ಮಾಡಿದ್ದರು.
 
ಹೈಕಮಾಂಡ್‌ಗೆ ಸೆಡ್ಡು ಹೊಡೆಯುವ ಪ್ರಯತ್ನವಾಗಿ ಪುಟ್ಟಸ್ವಾಮಿ ಅವರನ್ನು ಕಣಕ್ಕಿಳಿಸಲು ಮುಂದಾದ ಯಡಿಯೂರಪ್ಪ, ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಬೆಂಬಲಿಸಲು ಶಾಸಕರು ಸಹಿ ಮಾಡಿದ್ದ ಸೂಚನಾ ಪತ್ರವನ್ನು ಯಾರಿಗೂ ತಿಳಿಯದಂತೆ ಬಳಸಿಕೊಂಡಿದ್ದಾರೆ ಎನ್ನಲಾಗಿದೆ.
 
ಪುಟ್ಟಸ್ವಾಮಿ ಅವರ ನಾಮಪತ್ರದ ಜೊತೆ ಸಲ್ಲಿಸಿರುವ ಸೂಚನಾ ಪತ್ರದಲ್ಲಿ ಸಹಿ ಇರುವ ಶಾಸಕರಿಗೆ ಪಕ್ಷದ ಅಧ್ಯಕ್ಷರು ನೋಟಿಸ್ ಜಾರಿ ಮಾಡಿದ ಬಳಿಕ ಈ ವಿಷಯ ಬಹಿರಂಗವಾಗಿದೆ.

ತಮ್ಮ ಸಹಿಗಳನ್ನು ದುರ್ಬಳಕೆ ಮಾಡಿಕೊಂಡಿರುವ ವಿಷಯ ಗೊತ್ತಾಗುತ್ತಿದ್ದಂತೆಯೇ ಶಾಸಕರು ಪುಟ್ಟಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ನಾಮಪತ್ರ ವಾಪಸ್ ಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.