ಮಂಗಳೂರು: ‘ಯಾವುದೇ ಕಾರಣಕ್ಕೂ ನಾವು ಕಾಂಗ್ರೆಸ್ ಬಿಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಬಿಜೆಪಿಯವರು ನಮ್ಮ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಬೆಳ್ತಂಗಡಿ ಶಾಸಕ ಕೆ.ವಸಂತ ಬಂಗೇರ ಮತ್ತು ಪುತ್ತೂರು ಶಾಸಕಿ ಟಿ.ಶಕುಂತಳಾ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವದಂತಿ ಕುರಿತು ಶುಕ್ರವಾರ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯ ಕೆಲವರು ನಮ್ಮ ಮಾನಹಾನಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಆ ಪಕ್ಷದಿಂದ ಯಾರೊಬ್ಬರೂ ನಮ್ಮನ್ನು ಸಂಪರ್ಕಿಸಿಲ್ಲ, ಅದಕ್ಕೆ ಅವಕಾಶವೂ ನೀಡುವುದಿಲ್ಲ. ಈ ರೀತಿಯ ವದಂತಿಗಳಿಗೆ ಯಾರೂ ಕಿವಿಗೊಡಬಾರದು’ ಎಂದಿದ್ದಾರೆ.
‘ಬಿಜೆಪಿಯವರ ಇಂತಹ ಅಪಪ್ರಚಾರಕ್ಕೆ ನಾನು ಬಗ್ಗುವುದಿಲ್ಲ. ನಮ್ಮಲ್ಲಿ ಗೊಂದಲ ಸೃಷ್ಟಿ ಮಾಡಿ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಇದಕ್ಕೆ ತಕ್ಕ ಪಾಠ ಕಲಿಸಲು ನನಗೂ ಗೊತ್ತಿದೆ’ ಎಂದು ವಸಂತ ಬಂಗೇರ ಹೇಳಿದ್ದಾರೆ.
‘ಕೆಲವರ ಸ್ವಾರ್ಥದಿಂದಾಗಿ ಬೇಸತ್ತು ಬಿಜೆಪಿಯಿಂದ ಹೊರಬಂದಿದ್ದೇನೆ. ಇದೀಗ ಅವರಿಗೆ ನಾನು ಬೇಕಾಗಿದೆ. ನನಗೂ ಸ್ವಾಭಿಮಾನ ಇದೆ. ಅದಕ್ಕೆ ಧಕ್ಕೆ ತರುವ ಕೆಲಸ ಮಾಡುವುದಿಲ್ಲ’ ಎಂದು ಶಕುಂತಳಾ ಶೆಟ್ಟಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.