ADVERTISEMENT

ಸೋಸಲೆ ಮಠದ ಪ್ರಕರಣ; ಮರುಪರಿಶೀಲನೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 4 ಮೇ 2019, 18:27 IST
Last Updated 4 ಮೇ 2019, 18:27 IST
   

ನವದೆಹಲಿ: ಸೋಸಲೆ ವ್ಯಾಸರಾಜ ಮಠದ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಪ್ರಕರಣದಲ್ಲಿ ಮಠಾಧಿಪತಿ ವಿದ್ಯಾ ಮನೋಹರ್ ತೀರ್ಥ ಅವರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಗಳನ್ನು ರದ್ದು ಮಾಡಿದ್ದ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.

ಪ್ರಕರಣವನ್ನು ಮತ್ತೆ ಹೈಕೋರ್ಟ್‌ಗೆ ವರ್ಗಾಯಿಸಿರುವ ಸುಪ್ರೀಂ ಕೋರ್ಟ್‌, ‘ಮತ್ತೊಮ್ಮೆ ಪರಿಶೀಲಿಸಿ’ ಎಂದು ಸೂಚಿಸಿದೆ.

ಮಠಕ್ಕೆ ಸೇರಿದ 559 ಎಕರೆ ಜಮೀನನ್ನು ಸರ್ಕಾರಿ ಅಧಿಕಾರಿಯೊಬ್ಬರ ಪತ್ನಿಗೆ ಮಾರಾಟ ಮಾಡಲು ಮಠಾಧಿಪತಿ ಅಕ್ರಮವಾಗಿ ಒಪ್ಪಂದ ಮಾಡಿಕೊಂಡಿದ್ದರು ಎಂಬುದು ಆರೋಪ. ಈ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ಸಹ ದಾಖಲಾಗಿತ್ತು. ಆದರೆ ಪ್ರಕರಣವು ಹೈಕೋರ್ಟ್‌ ಮೆಟ್ಟಿಲೇರಿದಾಗ, ಮಠಾಧಿಪತಿ ವಿರುದ್ಧದ ಕಾನೂನು ಪ್ರಕ್ರಿಯೆಗಳನ್ನು ಹೈಕೋರ್ಟ್ ರದ್ದುಪಡಿಸಿತ್ತು.

ADVERTISEMENT

ಬೆಂಗಳೂರಿನ ಕೃಷ್ಟ ಮತ್ತು ಡಿ.ಆರ್. ನರೇಂದ್ರ ಎಂಬುವರು ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

‘ಮಠದ ಜಮೀನನ್ನು ಮಠಾಧಿಪತಿ ಮಾರಾಟ ಮಾಡಲು ಸಾಧ್ಯವಿಲ್ಲ. ಅವರು ಆ ಜಮೀನಿನ ಒಡೆಯರೂ ಅಲ್ಲ. ಈ ಅಕ್ರಮಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ ಅನ್ನೂ ಹೈಕೋರ್ಟ್‌ ಪರಿಗಣಿಸಿಲ್ಲ’ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.