ಬೆಂಗಳೂರು: ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್–ಜೆಡಿಎಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶನಿವಾರ ವಜಾಗೊಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ತ್ರಿಸದಸ್ಯ ನ್ಯಾಯಪೀಠ, ಹಂಗಾಮಿ ಸ್ಪೀಕರ್ ಆಗಿ ಬೋಪಯ್ಯ ಮುಂದುವರಿಯಲಿದ್ದಾರೆ ಎಂದು ಆದೇಶಿಸಿದೆ.
ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಿರುವ ಬೋಪಯ್ಯ, ವಿಶ್ವಾಸಮತ ಯಾಚನೆ ಪ್ರಕ್ರಿಯೆಯನ್ನೂ ನಿರ್ವಹಿಸಲಿದ್ದಾರೆ. ಈ ನೇಮಕಕ್ಕೆ ತಕರಾರು ತೆಗೆದು ಕಾಂಗ್ರೆಸ್, ಜೆಡಿಎಸ್ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎ.ಕೆ. ಸಿಕ್ರಿ ನೇತೃತ್ವದ ಪೀಠವು ವಿಚಾರಣೆ ನಡೆಸಿತು.
‘ಸಾಂಪ್ರದಾಯಕ ಪದ್ಧತಿ ಇದ್ದರೂ ರಾಜ್ಯಪಾಲರ ನೇಮಕ ರದ್ದು ಮಾಡುವ ಅಧಿಕಾರ ನಮಗಿಲ್ಲ. ನಿರ್ದಿಷ್ಟ ವ್ಯಕ್ತಿಯನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡುವಂತೆ ರಾಜ್ಯಪಾಲರಿಗೆ ಸೂಚಿಸಲು ಕಾನೂನಿನಲ್ಲಿ ಅವಕಾಶವಿಲ್ಲ' ಎಂದ ನ್ಯಾಯಮೂರ್ತಿ ಎ.ಕೆ.ಸಿಕ್ರಿ, ಶಾಸಕರ ಪ್ರಮಾಣ ಹಾಗೂ ವಿಶ್ವಾಸಮತ ಯಾಚನೆ ಪ್ರಕ್ರಿಯೆ ನೇರ ಪ್ರಸಾರಕ್ಕೆ ಕೆಲವು ಸ್ಥಳಿಯ ಚಾನಲ್ಗಳಿಗೆ ಅವಕಾಶ ಕಲ್ಪಿಸಿ ಆದೇಶಿಸಿದರು.
ಸುಪ್ರೀಂ ಕೋರ್ಟ್ ಆದೇಶದಂತೆ ಬೋಪಯ್ಯ ಪ್ರೊ–ಟೆಮ್ (ತಾತ್ಕಾಲಿಕ ಅಥವಾ ಹಂಗಾಮಿ) ಸ್ಪೀಕರ್ ಆಗಿ ಮುಂದುವರಿದಿದ್ದಾರೆ. ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಸಂಪೂರ್ಣ ನೇರ ಪ್ರಸಾರವಾಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.