ಬೆಂಗಳೂರು: ಬರುವ ಮಾರ್ಚ್ ವೇಳೆಗೆ ಆಶ್ರಯ ಯೋಜನೆಯಡಿ ರಾಜ್ಯದಲ್ಲಿ ಐದು ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಶುಕ್ರವಾರ ಇಲ್ಲಿ ಹೇಳಿದರು.
ಪ್ರತಿಯೊಂದು ವಿಧಾನ ಸಭಾ ಕ್ಷೇತ್ರದಲ್ಲಿ ನಾಲ್ಕು ಸಾವಿರ ಮನೆಯಂತೆ 196 ಕ್ಷೇತ್ರಗಳಲ್ಲಿ ಐದು ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು. ಫಲಾನುಭವಿಗಳನ್ನು ಗುರುತಿಸುವ ಪ್ರಕ್ರಿಯೆ ಆರಂಭವಾಗಿದೆ. 30 ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಒಂದು ವೇಳೆ ಗ್ರಾಮ ಸಭೆಗಳಿಂದ ಪಟ್ಟಿ ಬರುವುದು ತಡವಾದರೆ ಅಧಿಕಾರಿಗಳೇ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಲಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಪ್ರತಿಯೊಬ್ಬ ಫಲಾನುಭವಿ ತನ್ನ ಪಾಲಿನ ಹತ್ತು ಸಾವಿರ ರೂಪಾಯಿ ಅಸಲು ಕಟ್ಟಿದರೆ ಮನೆಯನ್ನು ಅವರ ಹೆಸರಿಗೆ ನೀಡಲಾಗುವುದು ಎಂದರು.
ನಗರಾಭಿವೃದ್ಧಿ ಪ್ರಾಧಿಕಾರಗಳು, ವಾಲ್ಮೀಕಿ, ಅಂಬೇಡ್ಕರ್, ಇಂದಿರಾ ಅವಾಸ್ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಡಿ ಮನೆಗಳನ್ನು ನಿರ್ಮಿಸಿಕೊಡಲಾಗುತ್ತಿದ್ದು, ಬೇರೆ ಬೇರೆ ಯೋಜನೆಯಡಿ ಒಬ್ಬರೇ ಒಂದಕ್ಕಿಂತ ಹೆಚ್ಚು ಮನೆಗಳನ್ನು ಪಡೆಯುವ ಮೂಲಕ ದುರುಪಯೋಗ ಆಗುತ್ತಿರುವ ಪ್ರಕರಣಗಳು ಕಂಡುಬಂದಿವೆ.
ಆದ್ದರಿಂದ ಒಂದೇ ಏಜೆನ್ಸಿ ಮೂಲಕ ಬಡವರಿಗೆ ಮನೆಗಳನ್ನು ನಿರ್ಮಿಸಿಕೊಡುವಂತಾಗಬೇಕು ಎಂಬ ದೃಷ್ಟಿಯಿಂದ ವಸತಿ ಇಲಾಖೆ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಒಂದು ತಿಂಗಳಲ್ಲಿ ವರದಿ ಬರಲಿದ್ದು, ನಂತರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.