ಹಾವೇರಿ: ಜಿಲ್ಲೆಯ ಹಿರೇಕೆರೂರು ಮತ್ತು ಬ್ಯಾಡಗಿ ತಾಲ್ಲೂಕುಗಳಲ್ಲಿ ತಲಾ ಒಬ್ಬರು ಸೇರಿ ಒಟ್ಟು ಇಬ್ಬರು ಮಕ್ಕಳು ಡೆಂಗೆ ಜ್ವರದಿಂದ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಭವಿಸಿದೆ.
ಹಿರೇಕೆರೂರಿನ ಗೊಡಚಿಕೊಂಡ ಗ್ರಾಮದದಲ್ಲಿ ಡೆಂಗೆ ಜ್ವರದಿಂದ ಬಳಲುತ್ತಿದ್ದ ಬಾಲಕಿ ತನುಜಾ ಗುತ್ತೆಪ್ಪ ಕಟ್ಟಿಮನಿ (4) ಹಾಗೂ ಬ್ಯಾಡಗಿ ತಾಲ್ಲೂಕಿನ ಚಿಕ್ಕಬಾಸೂರ ಗ್ರಾಮದ ಬಾಲಕ ವಿಕಾಸ ನಾಗನಗೌಡ ಕಾಡನಗೌಡ್ರ (8) ಮೃತಪಟ್ಟವರು.
ಒಂದು ವಾರದಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದ ತನಿಜಾಳನ್ನು ಹಿರೇಕೆರೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ತನುಜಾ ಶುಕ್ರವಾರ ತಡರಾತ್ರಿ ಆಸ್ಪತ್ರೆಯಲ್ಲಿ ಅಸುನೀಗಿದಳು. ಗುತ್ತೆಪ್ಪ ಕಟ್ಟಿಮನಿ ಇವರ ಇನ್ನಿಬ್ಬರು ಮಕ್ಕಳಾದ ಒಂದೂವರೆ ವರ್ಷದ ಚೇತನಾ ಹಾಗೂ ಆರು ವರ್ಷದ ನಯನಾ ಕೂಡ ಶಂಕಿತ ಡೆಂಗೆ ಜ್ವರದಿಂದ ಬಳಲುತ್ತ್ದ್ದಿದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಕಾಸ ನಾಗನಗೌಡ ರಜೆ ಕಳೆಯಲು ಶಿವಮೊಗ್ಗ ಜಿಲ್ಲೆಯ ಲಕ್ಕವಳ್ಳಿಯಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದ. ವಾಪಸ್ ಬಂದಾಗ ಆತನಿಗೆ ಜ್ವರ ಕಾಣಿಸಿಕೊಂಡಿತ್ತು. ಹಾವೇರಿಯಲ್ಲಿ ಚಿಕಿತ್ಸೆ ಕೊಡಿಸಿದರೂ ಜ್ವರ ಕಡಿಮೆಯಾಗಲಿಲ್ಲ.
ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಇದು ಸೇರಿ ತಾಲ್ಲೂಕಿನಲ್ಲಿ ಡೆಂಗೆ ಜ್ವರಕ್ಕೆ ಬಲಿಯಾದವರ ಸಂಖೆ ಎರಡಕ್ಕೆ ಏರಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿ.ಆರ್. ಲಮಾಣಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.