ADVERTISEMENT

ಹಿಂದುಳಿದ ವರ್ಗದವರ ಮರೆತ ಸಿದ್ದರಾಮಯ್ಯ: ಈಶ್ವರಪ್ಪ ಆರೋಪ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2018, 12:37 IST
Last Updated 24 ಮಾರ್ಚ್ 2018, 12:37 IST
ಬೆಳಗಾವಿಯಲ್ಲಿ ಶನಿವಾರ ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಹಿಂದುಳಿದ ವರ್ಗಗಳ ಮೋರ್ಚಾ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮುಖಂಡ ಕೆ.ಎಸ್‌. ಈಶ್ವರಪ್ಪ ಮಾತನಾಡಿದರು. -ಪ್ರಜಾವಾಣಿ ಚಿತ್ರ
ಬೆಳಗಾವಿಯಲ್ಲಿ ಶನಿವಾರ ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಹಿಂದುಳಿದ ವರ್ಗಗಳ ಮೋರ್ಚಾ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮುಖಂಡ ಕೆ.ಎಸ್‌. ಈಶ್ವರಪ್ಪ ಮಾತನಾಡಿದರು. -ಪ್ರಜಾವಾಣಿ ಚಿತ್ರ   

ಬೆಳಗಾವಿ: ‘ಚುನಾವಣೆಗೆ ಮುಂಚೆ ಹಿಂದುಳಿದ ವರ್ಗದವರು ಹಾಗೂ ದಲಿತರ ಜಪ ಮಾಡಿದ್ದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ನಂತರ ಅವರನ್ನು ಸಂಪೂರ್ಣವಾಗಿ ಮರೆತುಬಿಟ್ಟಿದ್ದಾರೆ’ ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಕೆ.ಎಸ್‌. ಈಶ್ವರಪ್ಪ ವಾಗ್ದಾಳಿ ನಡೆಸಿದರು.

ನಗರದಲ್ಲಿ ಶನಿವಾರ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಹಿಂದುಳಿದ ವರ್ಗದವರಿಗೆ ಸೇರಿದ ಶ್ರದ್ಧಾಕೇಂದ್ರಗಳಿಗೆ ಬಿಜೆಪಿ ಸರ್ಕಾರದಲ್ಲಿ ಸಾಕಷ್ಟು ಅನುದಾನ ನೀಡಲಾಗಿತ್ತು. ವಿದ್ಯಾರ್ಥಿಗಳಿಗೆ ಆರ್ಥಿಕ ಸೌಲಭ್ಯ ನೀಡಲಾಗಿತ್ತು. ಜನಾಂಗದವರಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಈ ಜನಾಂಗದವರಿಗೆ ನೀವೇನು ಮಾಡಿದ್ದೀರಿ ಎನ್ನುವುದನ್ನು ಶ್ವೇತಪತ್ರ ಹೊರಡಿಸಿರಿ’ ಎಂದು ಒತ್ತಾಯಿಸಿದರು.

ADVERTISEMENT

ಬಿಜೆಪಿ ಜೊತೆಗಿದ್ದಾರೆ: ‘ಕಳೆದ ಬಾರಿ ಚುನಾವಣೆಯಲ್ಲಿ ಹಿಂದುಳಿದ ವರ್ಗದವರು ಹಾಗೂ ದಲಿತರು ಬೆಂಬಲ ನೀಡಿದ್ದರಿಂದಲೇ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿತು ಎಂದು ಹೇಳುತ್ತಿರುವುದು ಸುಳ್ಳು. ಬಿಜೆಪಿ– ಕೆಜೆಪಿ ಒಡಕಿನ ಲಾಭದಿಂದ ಕಾಂಗ್ರೆಸ್‌ ಅಧಿಕಾರಕ್ಕೇರಿತು. ಹಿಂದುಳಿದವರು ಹಾಗೂ ದಲಿತರು ಕಾಂಗ್ರೆಸ್‌ ಜೊತೆಗಿಲ್ಲ. ಅವರು ಬಿಜೆಪಿ ಜೊತೆಗಿದ್ದಾರೆ’ ಎಂದು ಹೇಳಿದರು.

ಶಾಮನೂರು ಅವರನ್ನು ಹೊರಹಾಕಲಿ: ‘ಲಿಂಗಾಯತ– ವೀರಶೈವ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಶಿಫಾರಸ್ಸು ಮಾಡಿರುವ ಸಚಿವ ಸಂಪುಟದ ತೀರ್ಮಾನವನ್ನು ವಿರೋಧಿಸುತ್ತಿರುವ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಸಿದ್ದರಾಮಯ್ಯ ಅವರು ತಾಕತ್ತಿದ್ದರೆ ಪಕ್ಷದಿಂದ ಹೊರಹಾಕಲಿ’ ಎಂದು ಸವಾಲು ಹಾಕಿದರು.

ಏ.3ರಂದು ಸಮಾವೇಶ: ‘ಕನಕರ ಕರ್ಮಭೂಮಿ ಕಾಗಿನೆಲೆಯಲ್ಲಿ ಏಪ್ರಿಲ್‌ 3ರಂದು ಹಿಂದುಳಿದ ವರ್ಗದವರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸೇರಿದಂತೆ ಪಕ್ಷದ ಎಲ್ಲ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ. ಲಕ್ಷಾಂತರ ಜನರು ಭಾಗವಹಿಸಲಿದ್ದು, ಇದನ್ನು ನೋಡಿ ಸಿದ್ದರಾಮಯ್ಯ ಅವರ ಎದೆ ಒಡೆದುಹೋಗಲಿದೆ’ ಎಂದು ಚುಚ್ಚಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.