ADVERTISEMENT

ಹೈ.ಕದಲ್ಲಿ ಸಾಧನಾ ಸಂಭ್ರಮಕ್ಕೆ ಇಂದು ಚಾಲನೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2017, 19:30 IST
Last Updated 12 ಡಿಸೆಂಬರ್ 2017, 19:30 IST
ಬಸವಕಲ್ಯಾಣದಲ್ಲಿನ ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಿರುವ ಸಭಾಭವನ
ಬಸವಕಲ್ಯಾಣದಲ್ಲಿನ ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಿರುವ ಸಭಾಭವನ   

ಬೀದರ್‌/ಕಲಬುರ್ಗಿ: ತಮ್ಮ ಸರ್ಕಾರದ ಸಾಧನೆ ಬಿಂಬಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಮ್ಮಿಕೊಂಡಿರುವ ‘ಸಾಧನಾ ಸಂಭ್ರಮ’ ಕಾರ್ಯಕ್ರಮಕ್ಕೆ ಬಸವಣ್ಣನವರ ಕಾರ್ಯಕ್ಷೇತ್ರ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಡಿ.13ರಂದು ಚಾಲನೆ ದೊರಕಲಿದೆ.

ಡಿ. 13ರಂದು ಬೀದರ್, 14ರಂದು ಕೊಪ್ಪಳ, 15ರಂದು ರಾಯಚೂರು, 16ರಂದು ಕಲಬುರ್ಗಿ, 17ರಂದು ಯಾದಗಿರಿ  ಮತ್ತು 18ರಂದು ಬಳ್ಳಾರಿ ಜಿಲ್ಲೆಗಳ ತಲಾ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮ ನಡೆಯಲಿದೆ.

ಮೊದಲ ದಿನ ಬೀದರ್ ಜಿಲ್ಲೆಯ ಬಸವ ಕಲ್ಯಾಣ, ಹುಮನಾಬಾದ್‌, ಭಾಲ್ಕಿಯಲ್ಲಿ ಕಾರ್ಯಕ್ರಮ ನಡೆಯಲಿವೆ. ಈ ಮೂರು ತಾಲ್ಲೂಕುಗಳಲ್ಲಿ ₹1,449 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ನೆರವೇರಿಸಲಿದ್ದಾರೆ.

ADVERTISEMENT

ಬಸವಕಲ್ಯಾಣ ಹಾಗೂ ಹುಮನಾಬಾದ್‌ಗಳಲ್ಲಿಯ ತೇರು ಮೈದಾನ, ಭಾಲ್ಕಿಯ ಭೀಮಣ್ಣ ಖಂಡ್ರೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ನಡೆಯಲಿರುವ ಸಮಾರಂಭಗಳಲ್ಲಿ ಸಿದ್ದರಾಮಯ್ಯ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂರೂ ತಾಲ್ಲೂಕು ಕೇಂದ್ರಗಳಲ್ಲಿ ಹೆಲಿಪ್ಯಾಡ್‌ ನಿರ್ಮಿಸಲಾಗಿದೆ.

‘ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ 25 ಸಾವಿರ ಜನರನ್ನು ಸೇರಿಸಲು ವ್ಯವಸ್ಥೆ ಮಾಡಲಾಗಿದೆ. ಸಾಧನಾ ಸಂಭ್ರಮ, ನವ ಕರ್ನಾಟಕ ನಿರ್ಮಾಣಕ್ಕಾಗಿ ಮುಖ್ಯಮಂತ್ರಿ ಪ್ರವಾಸ, ಸತ್ಯದ ನಡಿಗೆ ಹಾಗೂ ಜನಾಶೀರ್ವಾದ ಕಾರ್ಯಕ್ರಮ ಎಲ್ಲವೂ ಒಂದೇ ಬಾರಿಗೆ ಶುರುವಾಗಲಿವೆ’ ಎಂದು ಪೌರಾಡಳಿತ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.