ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹೇರಲು ಆತ್ಮಹತ್ಯೆಗೆ ಯತ್ನಿಸುವವರ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆಯಲ್ಲಿ ‘ಆತ್ಮಹತ್ಯೆ ನಿಗ್ರಹ ದಳ’ (ಎಎಸ್ಎಸ್) ರಚನೆಯಾಗಿದೆ.
ಬೆಳಗಾವಿಯ ರೈತನ ಆತ್ಮಹತ್ಯೆ ಹಾಗೂ ಬೆಂಗಳೂರಿನಲ್ಲಿ ಶಿಕ್ಷಕರ ಆತ್ಮಹತ್ಯೆ ಯತ್ನ ಪ್ರಕರಣಗಳ ನಂತರ ಎಎಸ್ಎಸ್ ಸ್ಥಾಪನೆ ಬಗ್ಗೆ ಚಿಂತನೆ ನಡೆದಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ನಡೆದ ಐಪಿಎಸ್ ಅಧಿಕಾರಿಗಳ ಸಭೆಯಲ್ಲಿ ‘ಆತ್ಮಹತ್ಯೆ ನಿಗ್ರಹ ದಳ’ ಸ್ಥಾಪನೆ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮೌಖಿಕ ಸೂಚನೆ ನೀಡಿದ್ದರು. ಸಿಎಂ ನಿರ್ದೇಶನದಂತೆ ಇಲಾಖೆಯಲ್ಲಿ ಈ ದಳ ಅಸ್ತಿತ್ವಕ್ಕೆ ಬಂದಿದೆ.
‘ಪ್ರತಿಭಟನೆಗಳು ನಡೆಯುವ ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಆತ್ಮಹತ್ಯೆ ನಿಗ್ರಹ ದಳ ಕಾರ್ಯನಿರ್ವಹಿಸುತ್ತದೆ. ಈ ತಂಡಕ್ಕೆ ಯಾವ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂಬುದನ್ನು ಆಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಆಯುಕ್ತರಿಗೆ ಬಿಡಲಾಗಿದೆ. ಪ್ರತಿ ತಂಡದಲ್ಲಿ ಒಬ್ಬರು ವೈದ್ಯರೂ ಇರುತ್ತಾರೆ’ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಎಂ.ಎನ್.ರೆಡ್ಡಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.