ADVERTISEMENT

‘ಪರಿಶಿಷ್ಟ ಪಂಗಡಕ್ಕೆ ಕಾಡುಗೊಲ್ಲರು’

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2013, 19:30 IST
Last Updated 10 ಡಿಸೆಂಬರ್ 2013, 19:30 IST

ಬೆಂಗಳೂರು: ಕಾಡುಗೊಲ್ಲ ಜನಾಂಗ­ವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿಸುವ ಪ್ರಸ್ತಾವ ಸರ್ಕಾರದ ಮುಂದಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ ತಿಳಿಸಿದರು.

ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಕೇಂದ್ರ ಸರ್ಕಾರ ಸಹ ಈ ಪ್ರಕ್ರಿಯೆಗೆ ಅನುಮೋದನೆ ನೀಡಬೇಕು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಗೊಲ್ಲರಹಟ್ಟಿಗಳಿಗೆ ನಾನು ಭೇಟಿ ನೀಡಿ ಅಲ್ಲಿನ ವಾಸ್ತವ ಸಮಸ್ಯೆಗಳನ್ನು ಅರಿತುಕೊಂಡಿದ್ದೇನೆ. ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿರುವ ಈ ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕ­ವಾಗಿ ಪ್ರಗತಿ ಸಾಧಿಸಬೇಕಾಗಿದೆ. ಈ ಜನಾಂಗವನ್ನು ಸಮಾಜದ ಮುಖ್ಯವಾಹಿನಿಗೆ ತರಲು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ­ಲಾಗಿದೆ.  ಗೊಲ್ಲರ­ಹಟ್ಟಿಗಳ ಅಭಿವೃದ್ಧಿಗೆ ₨25 ಕೋಟಿ ಮೀಸಲಿಡಲಾಗಿದೆ’ ಎಂದು ತಿಳಿಸಿದರು.

ಗೊಲ್ಲರಹಟ್ಟಿಗಳಲ್ಲಿನ ಮಹಿಳೆಯರ ವಿವಿಧ ಚಟುವಟಿಕೆಗಳಿಗಾಗಿ ಇಂದಿರಾ ಭವನಗಳನ್ನು ನಿರ್ಮಿಸಲಾಗುವುದು. ಪ್ರತಿಯೊಂದು ಭವನಕ್ಕೂ ರೂ.6 ಲಕ್ಷ ವೆಚ್ಚವಾಗಲಿದೆ. ಈ ವರ್ಷ 100 ಭವನಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಪ್ರತಿಯೊಂದು ಜಿಲ್ಲೆಯಲ್ಲಿ 10 ಭವನಗಳನ್ನು ನಿರ್ಮಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಗೊಲ್ಲ ಜನಾಂಗ ಇರುವ ಚಿತ್ರದುರ್ಗ ಜಿಲ್ಲೆಯಲ್ಲಿ 50 ಭವನಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಇದೇ 16ರಂದು ಚಿತ್ರದುರ್ಗದಲ್ಲಿ ಕಾಡುಗೊಲ್ಲ ಜನಾಂಗದ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಈ ಜನಾಂಗದ ಬಗ್ಗೆ ಅಧ್ಯಯನ ಮಾಡಿರುವ ತಜ್ಞರು ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.