ಬೆಂಗಳೂರು: ಕೋವಿಡ್ನಿಂದ ಗುಣಮುಖರಾದವರು ತಮ್ಮ ಪ್ಲಾಸ್ಮಾ ದಾನ ಮಾಡಿದರೆ ₹5 ಸಾವಿರ ಪ್ರೋತ್ಸಾಹಧನ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಕೋವಿಡ್ ಸೋಂಕಿಗೊಳಗಾದವರ ಪೈಕಿ ಈಗಾಗಲೇ 17,370 ಜನ ಗುಣಮುಖರಾಗಿದ್ದಾರೆ. ಐಸಿಯುನಲ್ಲಿ 597 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹವರ ಚಿಕಿತ್ಸೆಗೆ ಗುಣಮುಖರಾದವರ ಪ್ಲಾಸ್ಮಾ ಪರಿಣಾಮಕಾರಿಯಾಗಿದೆ. ಪ್ಲಾಸ್ಮಾ ದಾನ ಮಾಡಲು ಗುಣಮುಖರಾದವರು ಮುಂದೆ ಬರಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಇಲ್ಲಿಯವರೆಗೆ 9 ಲಕ್ಷ ಕೋವಿಡ್ ಪರೀಕ್ಷೆಗಳನ್ನು ಪೂರ್ಣಗೊಳಿಸಲಾಗಿದೆ. ಬುಧವಾರ ಒಂದೇ ದಿನ 22,204 ಪರೀಕ್ಷೆ ನಡೆಸಲಾಗಿದೆ ಎಂದು ಅವರು ವಿವರಿಸಿದರು.
25 ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಅವರು, ಕೋವಿಡ್ ಪರೀಕ್ಷೆ ಮಾಡದ ಖಾಸಗಿ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಅವರು ಎಚ್ಚರಿಸಿದರು.
ಪ್ರಯೋಗಾಲಯಗಳಿಗೆ ಬೇಕಾದ ಉಪಕರಣಗಳ ಕೊರತೆ ಇದ್ದಲ್ಲಿ ಪೂರೈಸಲು ತಕ್ಷಣ ಕ್ರಮವಹಿಸಬೇಕು. ಎಲ್ಲ ಪ್ರಯೋಗಾಲಯಗಳನ್ನು ಒಂದು ವಾರದೊಳಗೆ ಮೇಲ್ದರ್ಜೆಗೇರಿಸಬೇಕು. ಪ್ರತಿದಿನ 500 ಪರೀಕ್ಷೆಗಳನ್ನು ಮಾಡುವತ್ತ ಗಮನಹರಿಸಬೇಕು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.