ಬೆಳಗಾವಿ: ‘ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿಗಳಿಗೆಂದು ಕೇಂದ್ರ ಸರ್ಕಾರವು ₹ 949.14 ಕೋಟಿ ಅನುದಾನವನ್ನು ಮಂಗಳವಾರ ಮಂಜೂರು ಮಾಡಿದೆ. ಆದರೆ, ಇದು ಸಾಕಾಗುವುದಿಲ್ಲ’ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದರು.
ಮಂಗಳವಾರ ಇಲ್ಲಿ ಬರ ಪರಿಹಾರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.
‘ಮುಂಗಾರು ಹಂಗಾಮಿನಲ್ಲಿ ಮಳೆ ಇಲ್ಲದೇ ಆಗಿರುವ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಪರಿಹಾರ ಕಾರ್ಯಕ್ರಮಗಳನ್ನು ಕೈಗೊಳ್ಳುವುದಕ್ಕಾಗಿ ₹ 2,434 ಕೋಟಿ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಆದರೆ, ಕೊಟ್ಟಿರುವ ಅನುದಾನದ ಪ್ರಮಾಣ ಬಹಳ ಕಡಿಮೆಯಾಗಿದೆ. ಇದನ್ನು ಕೇಂದ್ರ ಮರುಪರಿಶೀಲಿಸಬೇಕು. ತೀವ್ರ ಬರದಿಂದಾಗಿ ರೈತರು ಸಂಕಷ್ಟದಲ್ಲಿದ್ದು, ಅವರಿಗೆ ನೆರವಾಗಬೇಕಾಗಿದೆ. ಹೀಗಾಗಿ, ಹೆಚ್ಚಿನ ಅನುದಾನ ಕೊಡುವಂತೆ ಕೇಂದ್ರವನ್ನು ಮತ್ತೊಮ್ಮೆ ಕೋರಲಾಗುವುದು’ ಎಂದು ಮಾಹಿತಿ ನೀಡಿದರು.
‘ಹಿಂಗಾರು ಹಂಗಾಮಿನಲ್ಲಿ 156 ತಾಲ್ಲೂಕುಗಳನ್ನು ಬರಗಾಲಪೀಡಿತ ಪ್ರದೇಶಗಳು ಎಂದು ಘೋಷಿಸಲಾಗಿದೆ. ಸರ್ಕಾರ ರಚಿಸಿರುವ ನಾಲ್ಕು ಸಚಿವ ಸಂಪುಟ ಉಪ ಸಮಿತಿಗಳು ಎಲ್ಲ ಜಿಲ್ಲೆಗಳಲ್ಲೂ ಪ್ರವಾಸ ಮಾಡುತ್ತಿವೆ. ಕಂದಾಯ ಹಾಗೂ ಕೃಷಿ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ. ಫೆಬ್ರುವರಿ ಮೊದಲ ವಾರ ಆಡಳಿತ ಪಕ್ಷ, ವಿರೋಧ ಪಕ್ಷದ ನಾಯಕರು, ಸಂಸದರ ನಿಯೋಗ ತೆರಳಿ ಕೇಂದ್ರ ಗೃಹ ಹಾಗೂ ಕೃಷಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.
‘ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಹಿಂದಿನ ಹಾಗೂ ಪ್ರಸಕ್ತ ಸಾಲಿನಲ್ಲಿ ₹ 1,900 ಕೋಟಿ ಕೇಂದ್ರದಿಂದ ಬಿಡುಗಡೆಯಾಗಬೇಕಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಗಮನಸೆಳೆಯಲಾಗುವುದು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.