ಮೈಸೂರು: `ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗಳಿರುವ ರಾಜ್ಯದ 10 ಜಿಲ್ಲೆಗಳಲ್ಲಿ ಆ. 15 ರಿಂದ ಆರೋಗ್ಯ ದಾಸೋಹ ಕಾರ್ಯಕ್ರಮ ಜಾರಿಗೆ ತರುವ ಮೂಲಕ ಎಲ್ಲ ಜನರನ್ನೂ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುವುದು~ ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ತಿಳಿಸಿದರು.
`ಸರ್ಕಾರಿ ಆಸ್ಪತ್ರೆ ವೈದ್ಯರು, ಎಎನ್ಎಂ, ಆಶಾ ಕಾರ್ಯಕರ್ತೆಯರ ನೆರವಿನೊಂದಿಗೆ 10 ಜಿಲ್ಲೆಗಳ ಎಲ್ಲ ತಾಲ್ಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುವುದು. ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್, ಹೃದ್ರೋಗ ಕಾಯಿಲೆ ಇರುವ ರೋಗಿಗಳನ್ನು ಗುರುತಿಸಿ ಅವರಿಗೆ ಉಚಿತ ಚಿಕಿತ್ಸೆ ಹಾಗೂ ಜೆನೆರಿಕ್ ಔಷಧಿ ನೀಡಲಾಗುವುದು. ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದ ಜಿಲ್ಲೆಗಳಲ್ಲಿ ಖಾಸಗಿ ಆಸ್ಪತ್ರೆ ಸಹಭಾಗಿತ್ವದೊಡನೆ ಚಿಕಿತ್ಸೆ ನೀಡುವ ಬಗ್ಗೆ ಚಿಂತನೆ ನಡೆದಿದೆ~ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
`ವೈದ್ಯಕೀಯ ಸಂಶೋಧನಾ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರ ತಂಡ ವಾರದಲ್ಲಿ ಒಂದು ದಿನ ಆಯಾ ತಾಲ್ಲೂಕು ಆಸ್ಪತ್ರೆಗಳಿಗೆ ತೆರಳಿ ತಪಾಸಣೆ ನಡೆಸಲಿದೆ.ಗಂಭೀರ ಕಾಯಿಲೆ ಇದ್ದಲ್ಲಿ ಶಸ್ತ್ರಚಿಕಿತ್ಸೆ ಕೈಗೊಳ್ಳಲಿದ್ದಾರೆ. ಬಿಪಿಎಲ್ ಪಡಿತರ ಕಾರ್ಡುದಾರರಿಗೆ ಉಚಿತವಾಗಿ ಹಾಗೂ ಇತರರಿಗೆ ಶೇ 50 ರಿಯಾಯಿತಿ ದರದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗುವುದು~ ಎಂದು ತಿಳಿಸಿದರು.
`ದೇಶದ 12 ಲಕ್ಷ ಹಾಗೂ ರಾಜ್ಯದ 1.20 ಲಕ್ಷ ಜನರಲ್ಲಿ ಕ್ಯಾನ್ಸರ್ ಕಾಯಿಲೆ ಇರುವುದು ಪತ್ತೆ ಆಗಿದೆ. 35 ರಿಂದ 50 ವರ್ಷದ ಮಹಿಳೆಯರು ಹಾಗೂ ಚಿಕ್ಕ ಮಕ್ಕಳಲ್ಲಿ ಕ್ಯಾನ್ಸರ್ ಹೆಚ್ಚಾಗಿರುವುದು ಕಂಡು ಬಂದಿದೆ.
ಈ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಹಾಗೂ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಸಹಭಾಗಿತ್ವದಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. 30 ದಿನಗಳಲ್ಲಿ ಈ ಬಗ್ಗೆ ವರದಿ ನೀಡುವಂತೆ ಸಂಬಂಧಿಸಿದ ಜಿಲ್ಲಾ ವೈದ್ಯರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ~ ಎಂದು ಈ ಸಂದರ್ಭದಲ್ಲಿ ಸಚಿವರು ಮಾಹಿತಿ ನೀಡಿದರು.
ಪ್ರಾಯೋಗಿಕ ಜಾರಿ
ಆರೋಗ್ಯ ದಾಸೋಹ ಕಾರ್ಯಕ್ರಮಕ್ಕೆ ಆ. 11 ರಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಚಾಲನೆ ನೀಡಲಾಗುವುದು. ಶುಶ್ರೂಷಕಿಯರು, ಎಎನ್ಎಂ ಹಾಗೂ ಆಶಾ ಕಾರ್ಯಕರ್ತೆಯರು ಈಗಾಗಲೇ ಮನೆ ಮನೆಗೆ ಹೋಗಿ ವೈದ್ಯಕೀಯ ತಪಾಸಣೆ ನಡೆಸಿದ್ದು, ಗಂಭೀರ ಕಾಯಿಲೆ ಇರುವ 1150 ಮಂದಿ ರೋಗಿಗಳನ್ನು ಗುರುತಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.