ಬಳ್ಳಾರಿ: ‘ಕೋವಿಡ್-19ಗೆ ಸಂಬಂಧಿಸಿದಂತೆ ರಾಜ್ಯದಲ್ಲಿ 10 ಜಿಲ್ಲೆಗಳನ್ನು ಹಾಟ್ಸ್ಪಾಟ್ ಎಂದು ಗುರುತಿಸಲಾಗಿದ್ದು, ಆ ಜಿಲ್ಲೆಗಳಲ್ಲಿ ವಿಶೇಷ ನಿಗಾ ವಹಿಸಲಾಗುತ್ತಿದೆ’ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರೊಂದಿಗೆ ಇಲ್ಲಿನ ಕೆಸ್ವಾನ್ನಲ್ಲಿ ಶುಕ್ರವಾರ ನಡೆದ ವಿಡಿಯೊ ಸಂವಾದದ ಬಳಿಕ ಅವರು ಈ ಮಾಹಿತಿ ನೀಡಿದರು.
‘ಸದ್ಯ ಸೊಂಕು ಕಂಡುಬಂದಿರುವವರ ಜೊತೆಗೆ 1,804 ಮಂದಿ ಪ್ರಥಮ ಹಂತದಲ್ಲಿ ಮತ್ತು 5,533 ಮಂದಿ ದ್ವಿತೀಯ ಹಂತದಲ್ಲಿ ಸಂಪರ್ಕಕ್ಕೆ ಬಂದಿದ್ದಾರೆ. ಅವರ ಮೇಲೂ ನಿಗಾ ವಹಿಸಲಾಗಿದೆ’ ಎಂದರು.
‘ರಾಜ್ಯದಲ್ಲಿ 10 ಕೊರೊನಾ ಪ್ರಯೋಗಾಲಯಗಳಿವೆ. ಉತ್ತರ ಕರ್ನಾಟಕದ 13 ಜಿಲ್ಲೆಗಳ ಪೈಕಿ ಕಲಬುರ್ಗಿ, ಬಳ್ಳಾರಿ ಹಾಗೂ ಹುಬ್ಬಳ್ಳಿಯಲ್ಲಿ ತಲಾ ಒಂದು ಪ್ರಯೋಗಾಲಯಗಳಿವೆ. ಈ ಭಾಗಕ್ಕೆ ಇನ್ನೂ ಎರಡು ಪ್ರಯೋಗಾಲಯಗಳ ಅಗತ್ಯವಿದೆ’ ಎಂದರು.
‘ರಾಜ್ಯದ ಹಾಟ್ಸ್ಪಾಟ್ಗಳಲ್ಲಿ ಒಂದಾದ ಮೈಸೂರು ಜಿಲ್ಲೆಯ ಒಟ್ಟು ಪ್ರಕರಣಗಳಲ್ಲಿ ನಂಜನಗೂಡಿನ ಜ್ಯುಬಿಲಿಯೆಂಟ್ ಕಾರ್ಖಾನೆಯೊಂದರಲ್ಲೇ 26 ಪ್ರಕರಣಗಳು ದೃಢಪಟ್ಟಿವೆ. ಕಾರ್ಖಾನೆಗೆ ಸೆಮಿಲಿಕ್ವಿಡ್ ಕಂಟೈನರ್ ಚೀನಾದಿಂದ ಬಂದಿದೆ. ಅದರ ಮಾದರಿಯನ್ನು ಪುಣೆಯ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವರದಿ ಬಂದಿಲ್ಲ’ ಎಂದು ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.