ಬೆಂಗಳೂರು: ಆರ್ಥಿಕವಾಗಿ ಹಿಂದುಳಿದವರಿಗೆರಾಜ್ಯ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಪಡೆಯುವಾಗ ಶೇ 10ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಪರಿಶೀಲಿಸಲು ರಚಿಸಲಾಗಿರುವ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಗುರುವಾರ ಸಭೆ ನಡೆಸಲಿದೆ.
2019ರ ಸಂವಿಧಾನ (103ನೇ ತಿದ್ದುಪಡಿ) ಕಾಯ್ದೆಯಂತೆ ಮೇಲ್ವರ್ಗ ಜಾತಿಯಲ್ಲಿರುವಆರ್ಥಿಕವಾಗಿ ಹಿಂದುಳಿದವರು ಮೀಸಲಾತಿಗೆ ಅರ್ಹರಾಗಿರುತ್ತಾರೆ. ಇದುವರೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗದವರಿಗೆ ಮಾತ್ರ ಈ ಸೌಲಭ್ಯ ಇತ್ತು.
ಕೇಂದ್ರ ಸರ್ಕಾರ ಕಳೆದ ಜನವರಿಯಲ್ಲಿ ಅಧಿಸೂಚನೆ ಹೊರಡಿಸಿ, ಕೇಂದ್ರ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿ ಕಲ್ಪಿಸಿತ್ತು. ಆದರೆ ರಾಜ್ಯ ಸರ್ಕಾರ ಇನ್ನೂ ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಂಡಿಲ್ಲ. ಸದ್ಯ ಕೇಂದ್ರ ಸರ್ಕಾರಿ ಸೇವೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಗೆ ಅರ್ಹತೆ ಪಡೆಯುವ ಆರ್ಥಿಕವಾಗಿ ಹಿಂದುಳಿದವರಿಗೆ ಅಗತ್ಯದ ಆದಾಯ ಮತ್ತು ಇತರಪ್ರಮಾಣಪತ್ರ ಕೊಡುವುದಕ್ಕೆ ಮಾತ್ರ ಸಂಬಂಧಪಟ್ಟ ಅಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದಆನುಮತಿ ನೀಡಲಾಗಿದೆ.
ಸಂವಿಧಾನ ತಿದ್ದುಪಡಿ ಎಂದರೆ ಅದು ಜಾರಿಗೆ ತರಲೇಬೇಕಾದ ಆದೇಶ ಅಲ್ಲ,ರಾಜ್ಯ ಸರ್ಕಾರ ಇದನ್ನು ಜಾರಿಗೆ ತರಲೂಬಹುದು ಅಥವಾ ತರದೆಯೂ ಇರಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮಹಮ್ಮದ್ ಮೊಹ್ಸಿನ್ ಹೇಳಿದರು.
‘ಶೇ 10ರ ಮೀಸಲಾತಿಯನ್ನು ಜಾರಿಗೆ ತರುವುದಕ್ಕೆ ಬಹಳ ತಯಾರಿಯ ಅಗತ್ಯ ಇದೆ’ ಎಂದು ಅವರು ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.