ADVERTISEMENT

ರಾಜ್ಯ ಸರ್ಕಾರಿ ನೌಕರರಿಗೆ ಶೇ 11ರಷ್ಟು ತುಟ್ಟಿಭತ್ಯೆ; ಬಿ.ಎಸ್‌.ಯಡಿಯೂರಪ್ಪ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 12:44 IST
Last Updated 20 ಜುಲೈ 2021, 12:44 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ   

ಬೆಂಗಳೂರು: ಇದೇ ಜುಲೈ 1 ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಶೇ 11ರಷ್ಟು ತುಟ್ಟಿಭತ್ಯೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ 11.25ರಷ್ಟಿದ್ದು, ಈ ಹೆಚ್ಚಳದ ಆದೇಶ ಜಾರಿಯಾದರೆ ನೌಕರರ ಮೂಲವೇತನಕ್ಕೆ ಅನ್ವಯವಾಗುವಂತೆ ಶೇ 22.25ರಷ್ಟು ತುಟ್ಟಿಭತ್ಯೆ ಸಿಗಲಿದೆ.

ಕೋವಿಡ್ ಕಾರಣಕ್ಕೆ 2020ರ ಜನವರಿಯಿಂದ ನೀಡಬೇಕಾದ ಮೂರು ತುಟ್ಟಿಭತ್ಯೆಗಳನ್ನು ಸರ್ಕಾರ ತಡೆ ಹಿಡಿದಿತ್ತು. ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇ 11ರಷ್ಟು ತುಟ್ಟಿಭತ್ಯೆ ನೀಡುವ ತೀರ್ಮಾನ ಕೈಗೊಂಡಿತ್ತು. ಕೇಂದ್ರದ ಆದೇಶ ಮಂಗಳವಾರವಷ್ಟೇ (ಜುಲೈ 20) ಹೊರಬಿದ್ದಿದೆ. ಈ ಬೆನ್ನಲ್ಲೇ, ಮುಖ್ಯಮಂತ್ರಿ ಭೇಟಿ ಮಾಡಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದ ನಿಯೋಗ, ರಾಜ್ಯದಲ್ಲೂ ತುಟ್ಟಿಭತ್ಯೆ ಹೆಚ್ಚಿಸುವಂತೆ ಮನವಿ ಮಾಡಿತ್ತು.

ADVERTISEMENT

ಈ ಮನವಿಯನ್ನು ಯಡಿಯೂರಪ್ಪ ಅನುಮೋದಿಸಿದ್ದು, ಕೂಡಲೇ ಜಾರಿ ಮಾಡುವಂತೆ ಸೂಚನೆ ನೀಡಿದ್ದಾರೆ.

‘ಇನ್ನು ಎರಡು–ಮೂರು ದಿನಗಳಲ್ಲಿ ಈ ಕುರಿತ ಅಧಿಕೃತ ಆದೇಶ ಹೊರಬೀಳಲಿದೆ. ಇದರಿಂದಾಗಿ ಆರು ಲಕ್ಷ ನೌಕರರು, 4.50 ಲಕ್ಷ ಪಿಂಚಣಿದಾರರು ಹಾಗೂ ನಿಗಮ–ಮಂಡಳಿಗಳ 3 ಲಕ್ಷ ನೌಕರರಿಗೆ ಅನುಕೂಲವಾಗಲಿದೆ’ ಎಂದು ಷಡಾಕ್ಷರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.