ಬೆಂಗಳೂರು: ಇತ್ತೀಚೆಗೆ ಬಿದ್ದ ಅಕಾಲಿಕ ಮಳೆಯಿಂದಾಗಿ ಸುಮಾರು 1.22 ಲಕ್ಷ ಹೆಕ್ಟೇರ್ ಕೃಷಿ ಮತ್ತು 14,565 ಹೆಕ್ಟೇರ್ ತೋಟಗಾರಿಕಾ ಬೆಳೆಗಳು ಹಾಳಾಗಿವೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಗುಲ್ಬರ್ಗ ಮತ್ತು ಬೆಳಗಾವಿ ವಿಭಾಗದ ಒಂಬತ್ತು ಜಿಲ್ಲೆಗಳಲ್ಲಿ ಆಗಿರುವ ನಷ್ಟದ ಬಗ್ಗೆ ಪ್ರಕೃತಿ ವಿಕೋಪ ನಿರ್ವಹಣಾ ಘಟಕ ಮಾಹಿತಿ ಸಂಗ್ರಹಿಸುತ್ತಿದೆ.
ಎಷ್ಟು ಕೋಟಿ ರೂಪಾಯಿ ಬೆಳೆ ನಷ್ಟವಾಗಿದೆ ಎಂಬುದು ಇನ್ನೂ ನಿಖರವಾಗಿ ತಿಳಿಯುತ್ತಿಲ್ಲ ಎಂದು ಮೂಲಗಳು ಹೇಳಿವೆ. ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸರ್ವೇ ನಡೆಸುತ್ತಿದ್ದು, ವರದಿಗಳು ಬಂದ ನಂತರವೇ ಪರಿಹಾರದ ಬಗ್ಗೆ ಗಮನಹರಿಸಲಿವೆ ಎಂದು ಗೊತ್ತಾಗಿದೆ. ಲಭ್ಯ ಇರುವ ಮೂಲಗಳ ಪ್ರಕಾರ ಇದುವರೆಗೂ 11 ಮಂದಿ ಸತ್ತಿದ್ದಾರೆ. 157 ಜಾನುವಾರುಗಳು ಅಸುನೀಗಿವೆ. 551 ಮನೆಗಳು ಭಾಗಶಃ ಹಾನಿಗೊಳಗಾಗಿವೆ.
ಸಚಿವರ ಸಭೆ: ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಅಧಿಕಾರಿಗಳ ಸಭೆ ನಡೆಸಿ, ಬೆಳೆ ಹಾನಿ ಬಗ್ಗೆ ಮಾಹಿತಿ ಸಂಗ್ರಹಿಸಿದರು.
ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಅವರು ಅಧಿಕಾರಿಗಳಿಗೆ ಸೂಚಿಸಿದರು ಎಂದು ಗೊತ್ತಾಗಿದೆ.
ರೂ. 200 ಕೋಟಿ: ಜಿಲ್ಲಾಧಿಕಾರಿಗಳ ಬಳಿ ಸುಮಾರು ರೂ. 200 ಕೋಟಿ ಇದ್ದು, ಅದನ್ನು ತುರ್ತು ಪರಿಹಾರ ಕ್ರಮಗಳಿಗೆ ಬಳಸಲು ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿಜಾಪುರ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ, ಸುಮಾರು 4,113 ಹೆಕ್ಟೇರ್ ಪ್ರದೇಶದಲ್ಲಿನ ದ್ರಾಕ್ಷಿ ಬೆಳೆ ಹಾಳಾಗಿದೆ.
ಪರಿಹಾರ ಎಷ್ಟೆಷ್ಟು ಸಿಗಬಹುದು?
ನಿಯಮ ಪ್ರಕಾರ ದ್ರಾಕ್ಷಿ, ದಾಳಿಂಬೆ, ಮಾವು, ಅಡಿಕೆ, ತೆಂಗು ಇತ್ಯಾದಿ ವಾರ್ಷಿಕ ಬೆಳೆಗಳ ನಷ್ಟಕ್ಕೆ ಹೆಕ್ಟೇರ್ಗೆ ರೂ. 12,000 ಪರಿಹಾರ ನೀಡಲು ಅವಕಾಶ ಇದೆ. ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ಗೆ ರೂ. 4,500, ನೀರಾವರಿ ಬೆಳೆ ಹಾನಿಗೆ ರೂ. 8,000 ಪರಿಹಾರ ನೀಡಲು ಅವಕಾಶ ಇದೆ.
‘ಪರಿಹಾರ ನೀಡಲು ಅಡ್ಡಿ ಇಲ್ಲ’
ಮಳೆಯಿಂದ ಬೆಳೆ ಹಾನಿಯಾಗಿರುವ ಕಡೆ ಪ್ರಕೃತಿ ವಿಕೋಪ ನಿಧಿಯಿಂದ ಪರಿಹಾರ ನೀಡಲು ಚುನಾವಣಾ ನೀತಿ ಸಂಹಿತೆ ಅಡ್ಡಿ ಆಗುವುದಿಲ್ಲ. ಚುನಾವಣಾ ಆಯೋಗದ ಅನುಮತಿ ಪಡೆದು ಸಂತ್ರಸ್ತರಿಗೆ ನೆರವು ನೀಡಬಹುದು ಎಂದು ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ತಿಳಿಸಿದರು.
ಪರಿಹಾರ ಬಿಡುಗಡೆಗೆ ಶೆಟ್ಟರ್ ಆಗ್ರಹ
ರಾಜ್ಯ ಸರ್ಕಾರ ಲೋಕಸಭಾ ಚುನಾವಣೆಯ ಗುಂಗಿನಿಂದ ಹೊರಬಂದು ಅಕಾಲಿಕ ಮಳೆಯಿಂದ ನಷ್ಟಕ್ಕೆ ತುತ್ತಾಗಿರುವ ರೈತರ ನೆರವಿಗೆ ಧಾವಿಸಬೇಕು ಎಂದು ವಿಧಾನಸಭೆ ವಿರೋಧಪಕ್ಷ ನಾಯಕ ಜಗದೀಶ ಶೆಟ್ಟರ್ ಸೋಮವಾರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಭಾರಿ ಮಳೆಯಿಂದಾಗಿ ಅಪಾರ ನಷ್ಟ ಆಗಿದೆ. ರೈತರು ಕೂಡ ಸತ್ತಿದ್ದಾರೆ. ಹೀಗಾಗಿ ತಕ್ಷಣ ಪರಿಹಾರ ನೀಡಬೇಕು. ಪ್ರಾಣ ಕಳೆದುಕೊಂಡ ರೈತರ ಕುಟುಂಬ ವರ್ಗಕ್ಕೆ ತಲಾ 20 ಲಕ್ಷ ಪರಿಹಾರ ನೀಡಬೇಕು ಎಂದೂ ಅವರು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
ನೆರವು ನೀಡುವಂತೆ ಕೇಂದ್ರ ಸರ್ಕಾರದ ಮೇಲೂ ಒತ್ತಡ ಹೇರಬೇಕು ಎಂದು ವರು ಆಗ್ರಹಪಡಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಶೆಟ್ಟರ್ ಪತ್ರ ಬರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.