ADVERTISEMENT

13 ಜಿಲ್ಲೆಗಳಲ್ಲಿ ಬರದ ಛಾಯೆ: ಆರ್‌.ವಿ. ದೇಶಪಾಂಡೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2018, 19:10 IST
Last Updated 7 ಆಗಸ್ಟ್ 2018, 19:10 IST

ಬೆಂಗಳೂರು: ‘ಉತ್ತರ ಒಳನಾಡಿನ 13 ಜಿಲ್ಲೆಗಳಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದ್ದು, ಬರದ ಛಾಯೆ ಆವರಿಸಿದೆ’ ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದರು.

ಈ ಜಿಲ್ಲೆಗಳಲ್ಲಿ ಪರ್ಯಾಯ ಬೆಳೆ ಬೆಳೆಯುವ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳ ಜೊತೆ ಮಂಗಳವಾರ ಚರ್ಚೆ ನಡೆಸಿದ ಸಚಿವರು, ಪರಿಸ್ಥಿತಿ ಅವಲೋಕಿಸಲು ಪ್ರತಿವಾರ ಸಭೆ ನಡೆಸುವಂತೆ ಅಭಿವೃದ್ಧಿ ಆಯುಕ್ತರಿಗೆ ಸೂಚಿಸಿದರು. ‌

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವರು. ‘ಕೇಂದ್ರ ಸರ್ಕಾರದ ಮಾನದಂಡಗಳು ಬದಲಾಗಿರುವುದರಿಂದ ಬರಪೀಡಿತ ಎಂದು ಘೋಷಣೆ ಮಾಡಲು ಸಾಧ್ಯವಿಲ್ಲ. ಪರಿಸ್ಥಿತಿ ನಿವಾರಣೆಗೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದರು.

ADVERTISEMENT

‘ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ 184 ಹಳ್ಳಿಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿಗಳ ಖಾತೆಗಳಲ್ಲಿ ಒಟ್ಟು ₹ 221 ಕೋಟಿ ಇದೆ. ಹಣಕ್ಕೆ ಕೊರತೆ ಇಲ್ಲ. ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) 150 ದಿನಗಳ ಕೂಲಿ ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ’ ಎಂದರು.

‘1996ರಲ್ಲಿ ಆಗಬೇಕಿದ್ದ ಭೂ ದಾಖಲೆ ಸರ್ವೆ ಆರಂಭಿಸಲಾಗಿದೆ. ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ತುಮಕೂರು ಜಿಲ್ಲೆಗಳಲ್ಲಿ ಈ ಕಾರ್ಯ ನಡೆಯುತ್ತಿದೆ’ ಎಂದರು.

ಬಗರ್ ಹುಕುಂ ಭೂಮಿ‌ ಹಂಚಿಕೆ: ಅರಣ್ಯ ಹಕ್ಕು ಸಮಿತಿ ಹಾಗೂ ಬಗರ್ ಹುಕುಂ ಸಮಿತಿ ರಚಿಸಿ ಇದೇ 20ರೊಳಗೆ ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು. ಭೂಮಿ ಹಂಚಿಕೆಯಲ್ಲಿ ಆಗಿರುವ ಸಮಸ್ಯೆಗಳನ್ನು ಸರಿಪಡಿಸಲಾಗುವುದು. ಅಗತ್ಯ ಬಿದ್ದರೆ ತನಿಖೆ ನಡೆಸಲಾಗುವುದು’ ಎಂದು ಸಚಿವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.