ಹಾವೇರಿ: ‘ಏಪ್ರಿಲ್ ತಿಂಗಳಲ್ಲಿ ಪಡಿತರ ವಿತರಣೆಯಲ್ಲಿ ಅಕ್ರಮವೆಸಗಿದ ವಿವಿಧ ಜಿಲ್ಲೆಗಳ 146 ನ್ಯಾಯಬೆಲೆ ಅಂಗಡಿಗಳನ್ನು ಅಮಾನತು ಮಾಡಿದ್ದು, ₹ 4 ಲಕ್ಷ ದಂಡ ವಿಧಿಸಲಾಗಿದೆ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ತಿಳಿಸಿದರು.
ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದಅವರು, ಹಾವೇರಿ ಜಿಲ್ಲೆಯಲ್ಲೂ 9 ನ್ಯಾಯಬೆಲೆ ಅಂಗಡಿಗಳಿಗೆ ನೋಟಿಸ್ ನೀಡಿದ್ದು, ಹಾನಗಲ್ ತಾಲ್ಲೂಕಿನ ಒಂದು ನ್ಯಾಯಬೆಲೆ ಅಂಗಡಿಯನ್ನು ಅಮಾನತುಗೊಳಿಸಲಾಗಿದೆ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ:ಬಡವರ ಅನ್ನಕ್ಕೆ ಅಡ್ಡಿ ಬಂದವರ ಮೇಲೆ ಕ್ರಮ
ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ದರ ಪಟ್ಟಿ ಪ್ರಕಟಿಸಬೇಕು. ತೂಕ ಮತ್ತು ಅಳತೆಯಲ್ಲಿ ವ್ಯತ್ಯಾಸವಾಗಬಾರದು ಮತ್ತು ಗ್ರಾಹಕರಿಂದ ಸೇವಾ ತೆರಿಗೆ ತೆಗೆದುಕೊಳ್ಳುವಂತಿಲ್ಲ. ಈ ಬಗ್ಗೆ ದೂರುಗಳು ಬಂದರೆ ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ತಂಡ ರಚನೆ ಮಾಡಿಕೊಂಡು ಪ್ರತಿ ನ್ಯಾಯಬೆಲೆ ಅಂಗಡಿಗೂ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು.
ಆಹಾರ ಕೊರತೆಯಿಲ್ಲ:ಕೇಂದ್ರ ಸರ್ಕಾರದ ಬಳಿ ವರ್ಷಕ್ಕೆ ಆಗುವಷ್ಟು ಆಹಾರ ದಾಸ್ತಾನು ಇದೆ. ಅದೇ ರೀತಿ ರಾಜ್ಯದಲ್ಲೂ ಕೊರತೆ ಇಲ್ಲ. 8 ಲಕ್ಷ ಪಡಿತರ ಚೀಟಿದಾರರಿಗೆ ಸಂಬಂಧಪಟ್ಟ ಒಟ್ಟು 27 ಲಕ್ಷ ಮಂದಿಗೆ ಪಡಿತರ ನೀಡುತ್ತಿದ್ದೇವೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ 31.5 ಲಕ್ಷ ಜನರಿಗೆ ಕೇಂದ್ರ ಸರ್ಕಾರ 3 ತಿಂಗಳು ಉಚಿತವಾಗಿ ಅಡುಗೆ ಅನಿಲ ವಿತರಿಸಲು ಕ್ರಮ ಕೈಗೊಂಡಿದೆ. ಈಗಾಗಲೇ ಏಪ್ರಿಲ್ ತಿಂಗಳ ಹಣ ಎಲ್ಲ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ ಎಂದರು.
1 ಲಕ್ಷ ಕುಟುಂಬಗಳಿಗೆ ಉಚಿತ ಅನಿಲ:ರಾಜ್ಯ ಸರ್ಕಾರ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ರಾಜ್ಯದ 1 ಲಕ್ಷ ಕುಟುಂಬಗಳಿಗೆ ₹ 27 ಕೋಟಿ ವೆಚ್ಚದಲ್ಲಿ 3 ತಿಂಗಳು ಉಚಿತವಾಗಿ ಅಡುಗೆ ಅನಿಲ ನೀಡಲು ತೀರ್ಮಾನಿಸಿದೆ. ಕೇಂದ್ರ ಸರ್ಕಾರ ಭತ್ತ, ರಾಗಿ, ಜೋಳ ಖರೀದಿಸಲು ಅನುಮೋದನೆ ನೀಡಿದ್ದು, ಮಕ್ಕೆಜೋಳ ಖರೀದಿಸಲು ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.