ಬೆಂಗಳೂರು: ಕೋವಿಡ್ ಲಸಿಕೆ ಪಡೆಯಲು ರಾಜ್ಯದಲ್ಲಿ ಮೊದಲ ಹಂತದಲ್ಲಿ ನಿಗದಿಪಡಿಸಲಾಗಿದ್ದ ಆರೋಗ್ಯ ಕಾರ್ಯಕರ್ತರಲ್ಲಿ ಈವರೆಗೆ 1,82,503 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ.
ಲಸಿಕೆ ವಿತರಣೆ ಅಭಿಯಾನದ 7ನೇ ದಿನವಾದ ಶುಕ್ರವಾರ ರಾಜ್ಯದ 1,100 ಕೇಂದ್ರಗಳಲ್ಲಿ ಲಸಿಕೆ ವಿತರಿಸಲಾಯಿತು. 81,519 ಮಂದಿ ಫಲಾನುಭವಿಗಳಲ್ಲಿ 42,425 ಮಂದಿ ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆದುಕೊಂಡರು. ಉಳಿದವರು ಹಿಂಜರಿಕೆ, ಅನಾರೋಗ್ಯ ಸೇರಿದಂತೆ ವಿವಿಧ ಕಾರಣಗಳಿಂದ ಗೈರಾಗಿದ್ದರು. ಇಬ್ಬರಲ್ಲಿ ಗಂಭೀರವಾದ ಅಡ್ಡ ಪರಿಣಾಮ ಕಾಣಿಸಿಕೊಂಡಿದೆ.
ವಿವಿಧ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯರು ಲಸಿಕೆ ಪಡೆಯುವ ಮೂಲಕ ಆರೋಗ್ಯ ಕಾರ್ಯಕರ್ತರನ್ನು ಲಸಿಕೆ ಪಡೆಯುವಂತೆ ಪ್ರೇರೇಪಿಸಿದರು. ಚಿತ್ರದುರ್ಗ (ಶೇ 75), ಬೀದರ್, (ಶೇ 69), ಮಂಡ್ಯ (ಶೇ 69), ತುಮಕೂರು (ಶೇ 68), ಯಾದಗಿರಿ (ಶೇ 68) ಜಿಲ್ಲೆಯಲ್ಲಿ ಲಸಿಕೆ ಪಡೆಯುವಿಕೆಗೆ ಆರೋಗ್ಯ ಕಾರ್ಯಕರ್ತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಕೊಪ್ಪಳ, ಉಡುಪಿ ಸೇರಿದಂತೆ 9 ಜಿಲ್ಲೆಗಳಲ್ಲಿ ಅರ್ಧಕ್ಕೂ ಅಧಿಕ ಮಂದಿ ಗೈರಾಗಿದ್ದರು. ಈವರೆಗೆ ಲಸಿಕೆ ಪಡೆದವರಲ್ಲಿ 9 ಮಂದಿಯಲ್ಲಿ ಗಂಭೀರ ಅಡ್ಡ ಪರಿಣಾಮ ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
324 ಮಂದಿಗೆ ಸೋಂಕು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದ್ದು, ಶುಕ್ರವಾರ 324 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಈವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.34 ಲಕ್ಷ ದಾಟಿದೆ. ಸೋಂಕಿತರಲ್ಲಿ ಮತ್ತೆ ಮೂವರು ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,190ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 6,985ಕ್ಕೆ ಇಳಿಕೆಯಾಗಿದ್ದು, ಸೋಂಕಿತರಲ್ಲಿ ಸದ್ಯ 165 ಮಂದಿ ತೀವ್ರ ನಿಗಾ ಘಟಕದಲ್ಲಿ ಇದ್ದಾರೆ.
ಕೋವಿಡ್ ಪೀಡಿತರಲ್ಲಿ 890 ಮಂದಿ ಗುಣಮುಖರಾಗಿದ್ದಾರೆ. ಇದರಿಂದಾಗಿ ಕಾಯಿಲೆಯಿಂದ ಚೇತರಿಸಿಕೊಂಡವರ ಸಂಖ್ಯೆ 9.15 ಲಕ್ಷಕ್ಕೆ ತಲುಪಿದೆ. ಒಂದೇ ದಿನ 92 ಸಾವಿರ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ರಾಜ್ಯದಲ್ಲಿ 1.63 ಕೋಟಿ ಮಂದಿ ಪರೀಕ್ಷೆಗೆ ಒಳಪಟ್ಟಿದ್ದಾರೆ.
ಬೆಂಗಳೂರಿನಲ್ಲಿ 160 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.96 ಲಕ್ಷಕ್ಕೆ ತಲುಪಿದೆ. ಮೈಸೂರಿನಲ್ಲಿ ಮತ್ತೆ 19 ಪ್ರಕರಣಗಳು ವರದಿಯಾಗಿವೆ. ಅಲ್ಲಿ ಸೋಂಕಿತರ ಸಂಖ್ಯೆ 53,151ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 2 ಹಾಗೂ ದಕ್ಷಿಣ ಕನ್ನಡದಲ್ಲಿ ಒಂದು ಮರಣ ಪ್ರಕರಣ ಹೊಸದಾಗಿ ವರದಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.