ಬೆಂಗಳೂರು: ರಾಜ್ಯ ಸರ್ಕಾರದ ಸಹಸ್ರ ದಿನಾಚರಣೆ ಅಂಗವಾಗಿ ಬಿಜೆಪಿ ಎಲ್ಲ ಹಂತದ (ಗ್ರಾಪಂ, ತಾಪಂ, ಜಿಪಂ, ಸಹಕಾರಿ ಸಂಘ) ಚುನಾಯಿತ ಪ್ರತಿನಿಧಿಗಳು ಮತ್ತು ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಇದೇ 20ರಂದು ನಗರದಲ್ಲಿ ಆಯೋಜಿಸುತ್ತಿದ್ದು, ಈ ಕುರಿತು ಚರ್ಚಿಸಲು ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷದ ಪ್ರಮುಖರ ಸಭೆ ನಡೆಯಲಿದೆ.
ಬೆಳಿಗ್ಗೆ 8.30ಕ್ಕೆ ಮುಖ್ಯಮಂತ್ರಿಯವರ ನಿವಾಸದಲ್ಲಿ ಈ ಸಭೆ ನಡೆಯಲಿದ್ದು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್, ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ ಶೆಟ್ಟರ್, ಗೃಹ ಸಚಿವ ಆರ್.ಅಶೋಕ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಯಶಸ್ಸಿಗೆ ಏನು ಮಾಡಬೇಕು ಎನ್ನುವುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಿದ್ದಾರೆ.
ಶೆಟ್ಟರ್ಗೆ ಅಸಮಾಧಾನ: ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಜಗದೀಶ ಶೆಟ್ಟರ್ ಅಸಮಾಧಾನಗೊಂಡಿದ್ದು, ಈ ಕುರಿತು ಗುರುವಾರದ ಸಭೆಯಲ್ಲಿ ವಿಷಯ ಪ್ರಸ್ತಾಪಿಸಲಿದ್ದಾರೆ ಎಂದು ಗೊತ್ತಾಗಿದೆ.
ಈ ಸಭೆ ನಂತರ ಬೆಳಿಗ್ಗೆ 10ಕ್ಕೆ ಪಕ್ಷದ ಅಧ್ಯಕ್ಷ ಈಶ್ವರಪ್ಪ ಅವರು ಎಲ್ಲ ನಿಗಮ, ಮಂಡಳಿಗಳ ಅಧ್ಯಕ್ಷರ ಸಭೆಯನ್ನು ಕರೆದಿದ್ದು, ಅಲ್ಲಿಯೂ ಫೆ.20ರ ಸಮಾವೇಶದ ಬಗ್ಗೆಯೇ ಸಮಾಲೋಚನೆ ನಡೆಸಲಿದ್ದಾರೆ.
ಸಿಎಂ ದೆಹಲಿಗೆ: ಮಧ್ಯಾಹ್ನ ಎಂ.ಪಿ.ಪ್ರಕಾಶ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಜೆ ನವದೆಹಲಿಗೆ ತೆರಳಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.