ADVERTISEMENT

2009ರಲ್ಲಿ ನಡೆದ ಕೊಲೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದ ಡಿಜಿ

ವಕೀಲ ನೌಶಾದ್‌ ಕೊಲೆ: ಸಿಸಿಬಿಯಿಂದ ಭೂಗತ ಪಾತಕಿ ರವಿ ಪೂಜಾರಿ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2020, 7:24 IST
Last Updated 17 ಜೂನ್ 2020, 7:24 IST
ಕೇಂದ್ರ ಅಪರಾಧ ವಿಭಾಗ
ಕೇಂದ್ರ ಅಪರಾಧ ವಿಭಾಗ   

ಬೆಂಗಳೂರು: ಮಂಗಳೂರಿನಲ್ಲಿ ನಡೆದ ಭಟ್ಕಳದ ಯುವ ವಕೀಲ ನೌಶಾದ್‌ ಕಾಸೀಂಜಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ದಳದ (ಸಿಸಿಬಿ) ಪೊಲೀಸರು ಭೂಗತ ಪಾತಕಿ ರವಿ ಪೂಜಾರಿಯನ್ನು ವಿಚಾರಣೆ ನಡೆಸಲಿದ್ದಾರೆ.

ಈ ಪ್ರಕರಣದ ತನಿಖೆಯನ್ನು ಪೊಲೀಸ್ ಮಹಾನಿರ್ದೇಶಕ ಪ್ರವೀಣ್‌ ಸೂದ್‌ (ಡಿಜಿ ಆ್ಯಂಡ್‌ ಐಜಿಪಿ) ಅವರು ಸಿಸಿಬಿಗೆ ವಹಿಸಿದ್ದಾರೆ. ಹೀಗಾಗಿ, ಈ ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸರು ಸಿಸಿಬಿಗೆ ವರ್ಗಾಯಿಸಿದ್ದಾರೆ.

‘ನೌಶಾದ್‌ ಕೊಲೆ ಪ್ರಕರಣದ ತನಿಖೆಗಾಗಿ ಪೂಜಾರಿಯನ್ನು 10 ದಿನ ಅವಧಿಗೆ ವಶಕ್ಕೆ ಪಡೆಯಲಾಗಿದೆ’ ಎಂದ ಸಿಸಿಬಿ ಜಂಟಿ ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ ತಿಳಿಸಿದರು.

ADVERTISEMENT

2009 ಏಪ್ರಿಲ್‌ 9ರಂದು ಮಂಗಳೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ನೌಶಾದ್‌ ಕೊಲೆ ನಡೆದಿತ್ತು. ಭೂಗತ ಪಾತಕಿ ರಶೀದ್ ಮಲಬಾರಿ ಪರವಾಗಿ ನೌಶಾದ್‌ ವಾದಿಸಿದ್ದರು ಎಂಬ ಕಾರಣಕ್ಕೆ .ವಿ ಪೂಜಾರಿಯ ಆಣತಿಯಂತೆ ಕೊಲೆ ಮಾಡಲಾಗಿತ್ತು ಎಂಬ ಆರೋಪವಿದೆ. ಪ್ರಕರಣದಲ್ಲಿ ಒಟ್ಟು 12 ಮಂದಿ ಆರೋಪಿಗಳೆಂದು ಹೆಸರಿಸಲಾಗಿತ್ತು. ಆ ಪೈಕಿ, ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ಏಳು ಮಂದಿಯಲ್ಲಿ ಶಿವಪ್ರಕಾಶ್ ಮತ್ತು ದಿಲ್ಲಿಯ ರವಿ ಶುಕ್ವಾನಿ ಎಂಬಿಬ್ಬರ ಮೇಲಿನ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾದ ಕಾರಣ ಅವರನ್ನು ಖುಲಾಸೆಗೊಳಿಸಲಾಗಿತ್ತು. ಐವರು ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.