ಮಡಿಕೇರಿ: ಬಿಳಿಗೇರಿ ಬಳಿ ಸಂತ್ರಸ್ತರಿಗೆ 22 ಮನೆಗಳು ನಿರ್ಮಾಣವಾಗುತ್ತಿದ್ದು ಜೂನ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ರಾಜೀವ್ ಗಾಂಧಿ ವಸತಿ ನಿಗಮದ ಯೋಜನಾ ನಿರ್ದೇಶಕ ಎಚ್.ಶ್ರೀನಿವಾಸ್ ತಿಳಿಸಿದರು.
ಗಾಳಿಬೀಡು ಗ್ರಾಮದ ಬಳಿ 140 ಮನೆಗಳು ಮತ್ತು ಕೆ.ನಿಡುಗಣೆ ಗ್ರಾಮದ ಬಳಿ 80 ಮನೆಗಳು ನಿರ್ಮಾಣವಾಗುತ್ತಿದ್ದು ನವೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದೂ ಎಚ್.ಶ್ರೀನಿವಾಸ್ ಅವರು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ 2018ರ ಆಗಸ್ಟ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಹಲವು ಕುಟುಂಬಗಳು ಸಂತ್ರಸ್ತರಾಗಿದ್ದರು. ಈ ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಸ್ಥಳ ಗುರುತಿಸಿ, ಪ್ರತಿ ಮನೆಗೆ ₹9.84 ಲಕ್ಷ ವೆಚ್ಚದಲ್ಲಿ ಎರಡು ಬೆಡ್ರೂಮ್ ಒಳಗೊಂಡ ಉತ್ತಮ ಗುಣಮಟ್ಟದ ಮನೆಗಳನ್ನು ನಿರ್ಮಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕರ್ಣಂಗೇರಿಯಲ್ಲಿ ನಿರ್ಮಿಸಲಾಗಿದ್ದ 35 ಮನೆಗಳನ್ನು 2019ರ ಅಕ್ಟೋಬರ್ 25ರಂದು ಹಸ್ತಾಂತರಿಸಿದ್ದಾರೆ. ಜೂನ್ 4ರಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಹಾಗೂ ಕಂದಾಯ ಸಚಿವರಾದ ಆರ್.ಅಶೋಕ್ ಅವರು ಜಂಬೂರಿನಲ್ಲಿ ನಿರ್ಮಿಸಲಾಗಿರುವ 383 ಮತ್ತು ಮದೆನಾಡು ಬಳಿ ನಿರ್ಮಿಸಿರುವ 80 ಒಟ್ಟು 463 ಮನೆಗಳನ್ನು ಹಸ್ತಾಂತರ ಮಾಡಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮನೆಗಳ ಪರಿಶೀಲನೆ:ಗಾಳಿಬೀಡು ಮತ್ತು ಕೆ.ನಿಡುಗಣೆ ಗ್ರಾಮದ ಬಳಿ ಸಂತ್ರಸ್ತರಿಗೆ ನಿರ್ಮಾಣ ಆಗುತ್ತಿರುವ ಮನೆಗಳನ್ನು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.