ADVERTISEMENT

ಬೆಂಗಳೂರಿನಲ್ಲಿ 23 ಪೌರ ಕಾರ್ಮಿಕರಿಗೆ ಕೊರೊನಾ ಸೋಂಕು

​ಪ್ರಜಾವಾಣಿ ವಾರ್ತೆ
Published 26 ಜೂನ್ 2020, 16:04 IST
Last Updated 26 ಜೂನ್ 2020, 16:04 IST
   

ಬೆಂಗಳೂರು: ಇಲ್ಲಿನ ದೀಪಾಂಜಲಿ ನಗರದಲ್ಲಿ ಕೆಲಸ ಮಾಡುವ 23 ಪೌರ ಕಾರ್ಮಿಕರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.

ಇದೇ ತಿಂಗಳು 21ರಂದು ಜೆ.ಜೆ. ನಗರದ 54 ವರ್ಷದ ಪೌರ ಕಾರ್ಮಿಕನೊಬ್ಬ ಕೋವಿಡ್‌ನಿಂದ ಮೃತಪಟ್ಟ ಬಳಿಕ ಪಾದರಾಯನಪುರ, ಜೆ.ಜೆ.ನಗರ, ವಿಜಯ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳ 80 ಜನ ಪೌರ ಕಾರ್ಮಿಕರ ಗಂಟಲಿನ ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಇವರಲ್ಲಿ 23 ಜನರಿಗೆ ಕೊರೊನಾ ಸೋಂಕು ಇರುವುದು ಖಚಿತಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಸೋಂಕಿರುವ ಪೌರ ಕಾರ್ಮಿಕರನ್ನು ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಗುತ್ತಿದೆ. ಇವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಲಾಗುತ್ತಿದೆ. ಕುಟುಂಬ ಸದಸ್ಯರು, ಸಂಬಂಧಿಕರನ್ನು ಕ್ವಾರಂಟೈನ್‌ ಮಾಡಲಾಗುತ್ತಿದೆ ಎಂದೂ ಮೂಲಗಳು ತಿಳಿಸಿವೆ.

ADVERTISEMENT

ಎಲ್ಲರನ್ನೂ ಪರೀಕ್ಷೆ ಮಾಡಲಿ: ವೈದ್ಯಕೀಯ ಪರೀಕ್ಷೆಗೆ ಒಳಪಟ್ಟ ಪೌರ ಕಾರ್ಮಿಕರಲ್ಲಿ ಶೇ 25ರಷ್ಟು ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಎಲ್ಲ ಪೌರಕಾರ್ಮಿಕರನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಮಾಜಿ ಅಧ್ಯಕ್ಷ ನಾರಾಯಣ (ಮೈಸೂರು) ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸೋಂಕಿನಿಂದ ಅನಾರೋಗ್ಯಕ್ಕೆ ಒಳಗಾಗಿರುವ ಪೌರ ಕಾರ್ಮಿಕರಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು. ಎಲ್ಲರಿಗೂ ಮುಖಗವಸು ಮತ್ತು ಕೈ ಗವಸು ಸೇರಿದಂತೆ ಪೂರಕ ಪರಿಕರಗಳನ್ನು ವಿತರಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.