ADVERTISEMENT

25ಕ್ಕೆ ವಿಚಾರಣೆಗೆ ಹಾಜರಾಗಲು ಜಾಧವಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2019, 20:06 IST
Last Updated 21 ಮಾರ್ಚ್ 2019, 20:06 IST
   

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಚಿಂಚೋಳಿ ಕ್ಷೇತ್ರದ ಶಾಸಕ ಉಮೇಶ ಜಾಧವ ಅವರಿಗೆ ಇದೇ 25ರಂದು ವಿಚಾರಣೆಗೆ ಹಾಜರಾಗುವಂತೆ ವಿಧಾನಸಭಾಧ್ಯಕ್ಷ ಕೆ.ಆರ್‌. ರಮೇಶಕುಮಾರ್‌ ನೋಟಿಸ್‌ ನೀಡಿದ್ದಾರೆ.

ಸಭಾಧ್ಯಕ್ಷರನ್ನು ಇತ್ತೀಚೆಗೆ ಅವರ ನಿವಾಸದಲ್ಲಿ ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜಾಧವ, ಬಳಿಕ ಬಿಜೆಪಿ ಸೇರಿದ್ದರು. ಅವರು ಕಲಬುರ್ಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ‌.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಗೆ ಗೈರಾದ ಕಾರಣಕ್ಕೆ ಶಾಸಕರಾದ ಜಾಧವ, ರಮೇಶ ಜಾರಕಿಹೊಳಿ, ಬಿ. ನಾಗೇಂದ್ರ ಮತ್ತು ಮಹೇಶ ಕುಮಠಳ್ಳಿ ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸುವಂತೆ ಸಭಾಧ್ಯಕ್ಷರಿಗೆ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ದೂರು ನೀಡಿದ್ದರು. ಪಕ್ಷದ ವಿಫ್‌ ಉಲ್ಲಂಘಿಸಿದ ಕಾರಣಕ್ಕೂ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು.

ADVERTISEMENT

ಜಾಧವ ರಾಜೀನಾಮೆಯನ್ನು ವಿರೋಧಿಸಿ ಚಿಂಚೋಳಿಯ ಕೆಲವು ಸಂಘಟನೆಗಳೂ ಸಭಾಧ್ಯಕ್ಷರಿಗೆ ದೂರು ನೀಡಿವೆ. ‘ಅವರು ಕ್ಷೇತ್ರ ಜನರಿಗೆ ಮೋಸ ಮಾಡಿದ್ದಾರೆ. ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕು’ ಎಂದೂ ಸಂಘಟನೆಗಳು ಕೋರಿವೆ. ಈ ಬಗ್ಗೆಯೂ ವಿವರಣೆ ನೀಡುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.