ADVERTISEMENT

ಕೊಡಗು ಪ್ರವಾಹ: ಮನೆ ಕಳೆದುಕೊಂಡವರಿಗೆ ₹2 ಲಕ್ಷ ಪರಿಹಾರ ಘೋಷಿಸಿದ ಸಿಎಂ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2018, 12:20 IST
Last Updated 18 ಆಗಸ್ಟ್ 2018, 12:20 IST
ಗರದಲ್ಲಿ ಶನಿವಾರ ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಚಿವ ಕೆಜೆ ಜಾರ್ಜ್ ಸಚಿವೆ ಜಯಮಾಲಾ ಮತ್ತು ಅಧಿಕಾರಿಗಳು  ಪಾಲ್ಗೊಂಡಿದ್ದರು
ಗರದಲ್ಲಿ ಶನಿವಾರ ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಚಿವ ಕೆಜೆ ಜಾರ್ಜ್ ಸಚಿವೆ ಜಯಮಾಲಾ ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು   

ಬೆಂಗಳೂರು: ‘ಸತತ ಮಳೆ, ಬಿರುಗಾಳಿ, ಗುಡ್ಡ ಕುಸಿತದಿಂದ ಕೊಡಗು ಜಿಲ್ಲೆ ತತ್ತರಿಸಿ ಹೋಗಿದ್ದು, 953 ಸಿಬ್ಬಂದಿ ನಿರಂತರವಾಗಿ ನಾಗಕರಿಕ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಗೃಹಕಚೇರಿ ಕೃಷ್ಣಾದಲ್ಲಿ ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದ ಅವರು, ಅತಿವೃಷ್ಟಿ ಪೀಡಿತ ಜಿಲ್ಲೆಗಳ ಪರಿಸ್ಥಿತಿ ಹಾಗೂ ರಕ್ಷಣಾ ಕಾರ್ಯಾಚರಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೊಡಗಿನಲ್ಲಿ 2,500ಕ್ಕೂ ಹೆಚ್ಚಿನ ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಗುಡ್ಡು ಕುಸಿತದ ಕಾರಣದಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಕೆಲವು ಪ್ರದೇಶಗಳನ್ನು ತಲುಪಲು ರಕ್ಷಣಾ ತಂಡಕ್ಕೆ ಸಾಧ್ಯವಾಗುತ್ತಿಲ್ಲ. ಅಲ್ಲಿರುವವರಿಗೆ ಹೆಲಿಕಾಪ್ಟರ್ ಮೂಲಕ ಆಹಾರ, ನೀರಿನ ಪೂರೈಕೆ ಮಾಡಲಾಗುತ್ತಿದೆ’ ಎಂದು ವಿವರಿಸಿದರು.

ADVERTISEMENT

‘ಬೆಳಿಗ್ಗೆ ಜಿಲ್ಲಾಧಿಕಾರಿಗಳ ಜತೆ ವಿಡಿಯೊ ಸಂವಾದ ನಡೆಸಿದೆ. ನಾಗರಿಕರಿಗೆ ಸೀಮೆಎಣ್ಣೆ, ಅಡುಗೆ ಅನಿಲ ಸಿಲಿಂಡರ್ ಹಾಗೂ ಪೆಟ್ರೋಲ್‌ನ ಅವಶ್ಯಕತೆ ಇರುವುದಾಗಿ ಅವರು ತಿಳಿಸಿದರು. ತಕ್ಷಣ ಅವುಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಬ್ಯಾಂಕ್ ಅಧಿಕಾರಿಗಳ ಜತೆಗೂ ಮಾತನಾಡಿ, ಆ ಭಾಗದ ಎಲ್ಲ ಎಟಿಎಂಗಳಿಗೂ ಹಣ ತುಂಬುವಂತೆ ಸೂಚಿಸಿದ್ದೇನೆ’ ಎಂದರು.

‘ಕೊಡಗಿನಲ್ಲಿ 30 ಗಂಜಿ ಕೇಂದ್ರಗಳನ್ನು ತೆರೆಯಲಾಗಿದ್ದು, 2260 ಜನ ಆ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. 2.15 ಲಕ್ಷ ಲೀಟರ್ ಶುದ್ಧ ಕುಡಿಯುವ ನೀರನ್ನು ಕಳುಹಿಸಲಾಗಿದೆ. ರಕ್ಷಣೆ ಮಾಡಿದವರಿಗೆ ಚಿಕಿತ್ಸೆ ನೀಡಲು ವಿವಿಧ ಜಿಲ್ಲೆಗಳಿಂದ ವೈದ್ಯರನ್ನು ಕಳುಹಿಸಲಾಗಿದೆ. ಔಷಧಗಳನ್ನೂ ಪೂರೈಕೆ ಮಾಡಲಾಗಿದೆ. ಮನೆ ಕಳೆದುಕೊಂಡವರಿಗೆ ₹ 2 ಲಕ್ಷ ಪರಿಹಾರ ಘೋಷಿಸಲಾಗಿದೆ’ ಎಂದೂ ಹೇಳಿದರು.

ಬೆಳೆನಷ್ಟಕ್ಕೆ ಪರಿಹಾರ: ‘ಜಲಾಶಯಗಳು ಭರ್ತಿಯಾಗಿ ಹೊರ ಹರಿವು ಹೆಚ್ಚಾಗಿರುವ ಕಾರಣ ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಮೈಸೂರು ಹಾಗೂ ಹಾಸನದ ಭಾಗಗಳಲ್ಲಿ ಬೆಳೆ ನಷ್ಟ ಉಂಟಾಗಿದೆ. ಈ ಬಗ್ಗೆ ಅಧ್ಯಯನ ನಡೆಸಿ ಮೂರು ದಿನಗಳೊಳಗೆ ಜಿಲ್ಲಾವಾರು ವಿವರ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಆ ವರದಿ ಆಧರಿಸಿ ಪರಿಹಾರ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

‘ಶಾಶ್ವತ ಪರಿಹಾರ ಬೇಕು’
‘ಭೂ ಪರಿವರ್ತನೆ ಹಾಗೂ ರಸ್ತೆ ವಿಸ್ತರಣೆಗಾಗಿ ಪಶ್ಚಿಮ ಘಟ್ಟದ ಪ್ರದೇಶಗಳಲ್ಲಿ ಗುಡ್ಡಗಳನ್ನು ಕಡಿದಿರಿವುದೇ ಅತಿವೃಷ್ಟಿಗೆ ಪ್ರಮುಖ ಕಾರಣ. ಭವಿಷ್ಯದಲ್ಲಿ ಇಂಥ ತೊಂದರೆಗಳು ಉದ್ಭವಿಸದಂತೆ ಯಾವ ರೀತಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ವಿಚಾರವಾಗಿಯೂ ನುರಿತ ತಜ್ಞರೊಂದಿಗೆ ಸುಧೀರ್ಘ ಚರ್ಚೆ ನಡೆಸುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಹೇಳಿದರು.

ಇನ್ನಷ್ಟು:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.