ADVERTISEMENT

26ರೊಳಗೆ ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಜನವರಿ 2011, 19:30 IST
Last Updated 22 ಜನವರಿ 2011, 19:30 IST

ಬೆಂಗಳೂರು: ‘ಬಿ.ಎಸ್. ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇದೇ 26ರ ಒಳಗೆ ಮುಖ್ಯಮಂತ್ರಿ ಮತ್ತು ಅವರ ಸಂಪುಟದ ಭ್ರಷ್ಟ ಸಚಿವರು ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ಕಾಂಗ್ರೆಸ್ ರಾಜ್ಯದಾದ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಕರೆ ನೀಡಿದ್ದ ಬಂದ್ ವಿರುದ್ಧ ಕಾನೂನು ಸಮರ ಸಾರುವ ಕುರಿತು ನಾವು ಆಲೋಚನೆ ನಡೆಸುತ್ತಿದ್ದೇವೆ ‘ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಬಿಜೆಪಿ ಕಾರ್ಯಕರ್ತರ ಜೊತೆ ಸಚಿವ ಸುರೇಶ್ ಕುಮಾರ್ ಅವರು ರಾಜಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ. ಕಾನೂನು ಸಚಿವರಾದ ಸುರೇಶ್ ಕುಮಾರ್ ಅವರೇ ಕಾನೂನು ಉಲ್ಲಂಘಿಸಿದ್ದಾರೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಪ್ರತಿಕ್ರಿಯೆ: ಬಿಜೆಪಿ ಕರೆ ನೀಡಿದ್ದ ಸ್ವಯಂಪ್ರೇರಿತ ಬಂದ್‌ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು, ‘ಇದು ಸರ್ಕಾರಿ ಪ್ರಾಯೋಜಿತ ಬಂದ್, ಇದು ಫ್ಯಾಸಿಸ್ಟ್ ಮನಸ್ಸಿನವರ ವಿಕೃತ ರೂಪ’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.