ADVERTISEMENT

2ಎ ಮೀಸಲಾತಿ: ಸಿಎಂಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕೊನೆಯ ಗಡುವು

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2022, 13:38 IST
Last Updated 7 ಏಪ್ರಿಲ್ 2022, 13:38 IST
ಬಸವಜಯ ಮೃತ್ಯುಂಜಯ ಸ್ವಾಮೀಜಿ
ಬಸವಜಯ ಮೃತ್ಯುಂಜಯ ಸ್ವಾಮೀಜಿ   

ವಿಜಯಪುರ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಏಪ್ರಿಲ್‌ 14 ಕೊನೆಯ ಗಡುವು ನೀಡಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊನೆಯ ಗಡುವಿನೊಳಗೆ ಮೀಸಲಾತಿ ಘೋಷಣೆ ಮಾಡುವ ವಿಶ್ವಾಸವಿದ್ದು, ಈ ಸಂಬಂಧ ಏಪ್ರಿಲ್‌ 21ರಂದು ಕೂಡಲಸಂಗಮದಲ್ಲಿ ಮುಖ್ಯಮಂತ್ರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಿ, ರೇಷ್ಮೆ ರುಮಾಲು ಸುತ್ತಿ, ಕರದಂಟು ತಿನ್ನಿಸುತ್ತೇವೆ. ಇಲ್ಲವಾದರೆ ಅಂದೇ ಮರು ಹೋರಾಟ ಆರಂಭಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮೀಸಲಾತಿಗೆ ಆಗ್ರಹಿಸಿ ನೀಡಿರುವಕೊನೆಯ ಗಡುವನ್ನು ನೆನಪಿಸಲು ಹಾಗೂ ಮುಖ್ಯಮಂತ್ರಿ ಮೇಲೆ ಒತ್ತಡ ತರುವ ಉದ್ದೇಶದಿಂದ ಏಪ್ರಿಲ್‌ 10ರಂದು ವಿಜಯಪುರ ಜಿಲ್ಲೆ ಚಡಚಣದಲ್ಲಿ ಪಂಚಮಸಾಲಿಗಳ ಹಕ್ಕೊತ್ತಾಯ ಸಭೆ ನಡೆಯಲಿದೆ ಎಂದು ಹೇಳಿದರು.

ADVERTISEMENT

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಪ್ಪಿಸುವ ಹುನ್ನಾರ ನಡೆಸಿರುವವರಿಗೆ ಸಮಾಜವೇ ತಕ್ಕ ಪಾಠ ಕಲಿಸಲಿದೆ ಎಂದು ಎಚ್ಚರಿಕೆ ನೀಡಿದರು.

ಪಂಚಮಸಾಲಿಗಳಿಗೆ ಮೀಸಲಾತಿ ನೀಡುವ ವಿಷಯದಲ್ಲಿ ರಾಜ್ಯದಲ್ಲಿ ಬೇರಾವ ಸಮಾಜಗಳಿಂದಲೂ ವಿರೋಧವಿಲ್ಲ ಎಂದು ಹೇಳಿದರು.

ಬೆಲೆ ಏರಿಕೆ ನಿಯಂತ್ರಿಸಿ:

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಈಗಾಗಲೇ ಎರಡು ವರ್ಷಗಳಿಂದ ಕೋವಿಡ್‌ನಿಂದ ಜನರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಶ್ರೀಸಾಮಾನ್ಯರಿಗೆ ಹೊರೆಯಾಗದಂತೆಸರ್ಕಾರ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು ಎಂದು ಶ್ರೀಗಳು ಆಗ್ರಹಿಸಿದರು.

ಕಾನೂನು ಗೌರವಿಸಿ:

ಹಿಜಾಬ್‌, ಹಲಾಲ್‌, ಆಜಾನ್‌ ವಿಷಯಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮಾಜದವರು ಕಾನೂನು ಗೌರವಿಸಿ, ಆ ಪ್ರಕಾರ ನಡೆದುಕೊಳ್ಳಬೇಕು ಎಂದು ಶ್ರೀಗಳು ತಿಳಿ ಹೇಳಿದರು.

ಧರ್ಮ ಭಾವನಾತ್ಮಕ ವಿಕಾಸಕ್ಕೆ, ಶಿಕ್ಷಣ ಬದುಕು ಕಟ್ಟಿಕೊಳ್ಳಲು ಎಂಬುದನ್ನು ಅರಿತು, ಮಕ್ಕಳ ಶಿಕ್ಷಣ ಮುಖ್ಯ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.