ಬೆಂಗಳೂರು:ಬೆಂಗಳೂರು ಅರಮನೆ ಮೈದಾನ ಪ್ರದೇಶದ ಬಳಕೆ ಮತ್ತು ನಿಯಂತ್ರಣ ಅಧಿಕಾರವನ್ನು ರಾಜ್ಯ ಸರ್ಕಾರದ ಬಳಿಯೇ ಇಟ್ಟುಕೊಳ್ಳುವ ಉದ್ದೇಶದ ‘ಬೆಂಗಳೂರು ಅರಮನೆ (ಭೂಕಬಳಿಕೆ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ 2025’ ಕ್ಕೆ ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಒಪ್ಪಿಗೆ ನೀಡಿದ್ದಾರೆ.
ಬೆಂಗಳೂರು ಅರಮನೆಯ ಪ್ರದೇಶಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಯಾವುದೇ ಆದೇಶ ಅಥವಾ ತೀರ್ಪಿಗೆ ಅನುಸಾರ ಈಗಾಗಲೇ ನಷ್ಟ ಪರಿಹಾರ ಪಾವತಿಸಿದ್ದರೆ, ಸರ್ಕಾರದ ಕ್ರಮ ರಕ್ಷಿತವಾಗುವುದು. ಅಂದರೆ, 1996 ರಲ್ಲಿ ಅರಮನೆ ಮೈದಾನವನ್ನು ಸ್ವಾದೀನಕ್ಕೆ ತೆಗೆದುಕೊಂಡಾಗ ಪರಿಹಾರವಾಗಿ ಸರ್ಕಾರ ರಾಜಮನೆತನಕ್ಕೆ ₹11 ಕೋಟಿ ನೀಡಿತ್ತು. ಆ ಕ್ರಮವನ್ನು ರಕ್ಷಿಸುವುದು ತಿದ್ದುಪಡಿಯ ಉದ್ದೇಶವಾಗಿದೆ.
ಈ ಅಧಿನಿಯಮವು ಜಾರಿಗೆ ಬರುವುದಕ್ಕೆ ಮೊದಲು ಮತ್ತು ನ್ಯಾಯಾಲಯದ ತೀರ್ಪು ಅಥವಾ ಆದೇಶಕ್ಕೆ ಅನುಗುಣವಾಗಿ ಸರ್ಕಾರದ ತೀರ್ಮಾನದ ಪ್ರಕಾರ ನಷ್ಟ ಪರಿಹಾರ ಪಾವತಿಸಿದ್ದರೆ, ಮತ್ತೊಮ್ಮೆ ನಷ್ಟ ಪರಿಹಾರ ಪಾವತಿಸುವ ಅಗತ್ಯವಿಲ್ಲ. ಅಂದರೆ, ಈಗಾಗಲೇ ₹11 ಕೋಟಿ ಪರಿಹಾರ ಎಂದು ನಿಗದಿ ಮಾಡಿದ್ದರಿಂದ ಮತ್ತೆ ಪರಿಹಾರ ಮೊತ್ತ ಪರಿಷ್ಕರಣೆ ಮಾಡುವುದರಿಂದ ರಕ್ಷಣೆ ಪಡೆಯಲು ಈ ತಿದ್ದುಪಡಿ ಮಾಡಲಾಗಿದೆ.
ಅಲ್ಲದೇ, ಕರ್ನಾಟಕ ವೃತ್ತಿಗಳ, ಕಸುಬುಗಳ, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಿನ ತೆರಿಗೆ ಅಧಿನಿಯಮ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ಮಸೂದೆ 2025 ಕ್ಕೂ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.