ನವದೆಹಲಿ: ‘ಕರ್ನಾಟಕದಲ್ಲಿ ಮತ್ತೆ ಮೂರು ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಹೇಳಿಕೆ ನೀಡಿರುವ ಸಹಕಾರ ಸಚಿವ ಕೆ.ಎನ್. ರಾಜಣ್ಣ ಜತೆಗೆ ನಾನು ಮಾತನಾಡಿದ್ದೇನೆ. ಈ ವಿಷಯದ ಬಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡದಂತೆ ಹೇಳಿದ್ದೇನೆ’ ಎಂದು ಕಾಂಗ್ರೆಸ್ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದರು.
ಸೋಮವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ರಾಜಣ್ಣ ಜತೆಗೆ ಮಾತನಾಡಿದ್ದೇನೆ. ಯಾವ ಕಾರಣಕ್ಕೆ ಈ ಹೇಳಿಕೆ ನೀಡಿದ್ದೀರಿ ಎಂದು ಪ್ರಶ್ನಿಸಿದ್ದೇನೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂಬುದಾಗಿ ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮತ್ತೆ ಹೇಳಿಕೆ ನೀಡಬೇಡಿ ಎಂಬುದಾಗಿ ಸೂಚಿಸಿದ್ದೇನೆ’ ಎಂದರು.
ಪಕ್ಷ ಅಥವಾ ಸರ್ಕಾರದ ಕಾರ್ಯನಿರ್ವಹಣೆಯ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡುವ ನಾಯಕರು ಹಾಗೂ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸುರ್ಜೆವಾಲಾ ಎಚ್ಚರಿಕೆ ನೀಡಿದರು.
ಮೂರು ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬುದಾಗಿ ಹೇಳಿಕೆ ನೀಡಿದ್ದ ರಾಜಣ್ಣ ಅವರಿಗೆ ಎಚ್ಚರಿಕೆ ನೀಡಬೇಕು ಎಂದು ಆಗ್ರಹಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೈಕಮಾಂಡ್ಗೆ ದೂರು ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.