ಬೆಂಗಳೂರು: ಹೈದರಾಬಾದ್ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿರುವ ಸಂವಿಧಾನದ ಕಲಂ 371(ಜೆ) ತಿದ್ದುಪಡಿ ಜಾರಿಗೆ ನಿಯಮಾವಳಿ ರೂಪಿಸುವ ಕರಡು ಸಿದ್ಧವಾಗಿದ್ದು, ಶೀಘ್ರ ಇದಕ್ಕೆ ಅಂತಿಮ ರೂಪ ನೀಡುವ ಸಾಧ್ಯತೆ ಇದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಎಚ್.ಕೆ.ಪಾಟೀಲ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಂಪುಟ ಉಪ ಸಮಿತಿ ಮೊದಲ ಸಭೆಯಲ್ಲಿ ವಿಶೇಷ ಅಧಿಕಾರವುಳ್ಳ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ರೂಪುರೇಷಗಳ ಬಗ್ಗೆ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.
ರಾಜ್ಯಪಾಲರು ಮಂಡಳಿಯ ಅಧ್ಯಕ್ಷರಾಗಲಿದ್ದು, ಅವರಿಗೆ ಅಧಿಕಾರ ನೀಡುವ ಸಂಬಂಧ ರಾಷ್ಟ್ರಪತಿಗಳು ಪ್ರತ್ಯೇಕ ಅಧಿಸೂಚನೆ ಹೊರಡಿಸಬೇಕಾಗುತ್ತದೆ. ಈ ಸಂಬಂಧ ರೂಪಿಸಿರುವ ಕರಡು ಪ್ರತಿಗೆ ಸಮಿತಿ ಸಮ್ಮತಿ ಸೂಚಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ ನಂತರ ರಾಷ್ಟ್ರಪತಿಗೆ ಕಳುಹಿಸಲಾಗುತ್ತದೆ ಎಂದು ಗೊತ್ತಾಗಿದೆ.
ಶಿಕ್ಷಣ- ಉದ್ಯೋಗದಲ್ಲಿ ಹೈದರಾಬಾದ್ ಕರ್ನಾಟಕ ಭಾಗದವರಿಗೆ ಎಷ್ಟು ಮೀಸಲಾತಿ ನೀಡಬೇಕು ಎಂಬ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಆಗಿಲ್ಲ. ಮುಂದಿನ ಬುಧವಾರ ಮತ್ತೆ ಸಮಿತಿ ಸಭೆ ನಡೆಯಲಿದ್ದು, ಸಾಕಷ್ಟು ಚರ್ಚೆ ನಡೆಸಿದ ನಂತರವೇ ಅಂತಿಮ ರೂಪ ನೀಡಲಾಗುತ್ತದೆ ಎಂದು ಸಮಿತಿ ಸದಸ್ಯರಾದ ಹಿರಿಯ ಸಚಿವರೊಬ್ಬರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.