ಬೆಂಗಳೂರು: ನಗರದ ಕಾವಲ್ ಬೈರಸಂದ್ರದ ಮಂಜುಶ್ರೀ ನರ್ಸಿಂಗ್ ಕಾಲೇಜಿನ 40 ವಿದ್ಯಾರ್ಥಿಗಳಲ್ಲಿ ಕೋವಿಡ್ ಪತ್ತೆಯಾಗಿದೆ. ಕೇರಳದಿಂದ ಬಂದ ಇಬ್ಬರು ವಿದ್ಯಾರ್ಥಿಗಳಿಂದ ಅನ್ಯರಿಗೂ ಸೋಂಕು ಹರಡಿದೆ ಎಂದು ಗೊತ್ತಾಗಿದೆ.
ಈ ವಿಚಾರ ತಿಳಿಯುತ್ತಿದ್ದಂತೆಯೇ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಅವರು ಅಧಿಕಾರಿಗಳ ತಂಡದೊಂದಿಗೆ ಕಾಲೇಜಿಗೆ ಶನಿವಾರ ಭೇಟಿ ನೀಡಿದರು. ಸೋಂಕು ಹರಡದಂತೆ ತಡೆಯಲು ಕೈಗೊಂಡ ಕ್ರಮಗಳನ್ನು ಪರಿಶೀಲಿಸಿದರು. ಸೋಂಕಿತ ವಿದ್ಯಾರ್ಥಿಗಳು ರೋಗ ಲಕ್ಷಣ ಹೊಂದಿಲ್ಲ. ಅವರ ಪ್ರತ್ಯೇಕವಾಸಕ್ಕೆ ಸಮೀಪದ ಪೇಯಿಂಗ್ ಗೆಸ್ಟ್ ಕಟ್ಟಡದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.
ಮಂಜುಶ್ರೀ ಕಾಲೇಜಿನಲ್ಲಿ 210 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶೈಕ್ಷಣಿಕ ವರ್ಷದ ತರಗತಿಗಳು ಜ. 25ರಿಂದ ಆರಂಭವಾಗಿದ್ದವು. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಹುತೇಕ ವಿದ್ಯಾರ್ಥಿಗಳು ಕೇರಳದವರು. ತರಗತಿಗೆ ಹಾಜರಾಗಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಬ್ಬರಲ್ಲೂ ಕೊರೊನಾ ಸೋಂಕು ಪತ್ತೆಯಾಗಿತ್ತು. ಬಳಿಕ ಉಳಿದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ 40 ಮಂದಿಗೆ ಸೋಂಕು ಹಬ್ಬಿರುವುದು ಬೆಳಕಿಗೆ ಬಂದಿತ್ತು.
‘ಕೇರಳದಲ್ಲಿ ನಿತ್ಯವೂ 5 ಸಾವಿ ರಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಪತ್ತೆ ಯಾಗುತ್ತಿದೆ. ಅಲ್ಲಿಂದ ಬಂದ ವಿದ್ಯಾರ್ಥಿಗಳಿಂದ ಇತರ ಕಾಲೇಜು ಗಳಲ್ಲೂ ಸೋಂಕು ಹರಡುವ ಸಾಧ್ಯತೆ ಇದೆ. ಇದನ್ನು ತಡೆಗಟ್ಟಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ನರ್ಸಿಂಗ್ ಕಾಲೇಜುಗಳಲ್ಲಿ ಕೇರಳದ ವಿದ್ಯಾರ್ಥಿ ಗಳು ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅಂತಹ ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳನ್ನು ಕೋವಿಡ್ ಪರೀ ಕ್ಷೆಗೆ ಒಳಪಡಿಸಬೇಕು’ ಎಂದು ಅಧಿಕಾರಿ ಗಳಿಗೆ ಆಯುಕ್ತರು ಸೂಚಿಸಿದರು.
ಕೇರಳದ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಮುನ್ನ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಕೊರೊನಾ ಸೋಂಕು ಇಲ್ಲದವರಿಗೆ ಮಾತ್ರ ಕಾಲೇಜಿಗೆ ಪ್ರವೇಶ ನೀಡಬೇಕು ಎಂದು ಬಿಬಿಎಂಪಿ ಸೂಚಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.