ಬೆಂಗಳೂರು: ‘ಹೃದಯಾಘಾತದಿಂದ ಚೇತರಿಸಿಕೊಂಡಿದ್ದು,ವೈದ್ಯರ ಸಲಹೆ ಮೇರೆಗೆ ಆರು ವಾರಗಳು ವಿಶ್ರಾಂತಿ ಪಡೆದುಕೊಳ್ಳುತ್ತಿದ್ದೇನೆ. ಬಳಿಕ ಹಿಂದಿನಂತೆ ₹ 5 ಚಿಕಿತ್ಸೆಯನ್ನು ಮುಂದುವರೆಸುತ್ತೇನೆ’ ಎಂದು ಮಂಡ್ಯದ ಚರ್ಮರೋಗ ತಜ್ಞ ಡಾ.ಎಸ್.ಸಿ.ಶಂಕರೇಗೌಡ ತಿಳಿಸಿದರು.
ಶುಕ್ರವಾರ ಇಲ್ಲಿ ಫೋರ್ಟಿಸ್ ಆಸ್ಪತ್ರೆ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ತಿಂಗಳ ಹಿಂದೆ ಹೃದಯದಲ್ಲಿ ರಕ್ತದ ನಾಳಗಳು ಬ್ಲಾಕ್ ಆಗಿದ್ದ ಕಾರಣ ಹೃದಯಾಘಾತ ಸಂಭವಿಸಿತ್ತು. ಫೋರ್ಟಿಸ್ ಆಸ್ಪತ್ರೆ ವೈದ್ಯರು ನೀಡಿದ ಚಿಕಿತ್ಸೆಯಿಂದ ಈಗ ಗುಣಮುಖನಾಗಿದ್ದೇನೆ.42 ವರ್ಷಗಳಿಂದ ಮಂಡ್ಯದಲ್ಲಿ ಚಿಕಿತ್ಸೆ ನೀಡುತ್ತಾ ಬಂದಿರುವುದು ನನಗೆ ಆತ್ಮತೃಪ್ತಿ ನೀಡಿದೆ. ಈ ವೃತ್ತಿ ಮುಂದುವರೆಸಿಕೊಂಡು ಹೋಗಲಿದ್ದೇನೆ. ರಾಜಕೀಯಕ್ಕೆ ಕಾಲಿಟ್ಟಮೇಲೂ ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಕಸುಬು ಬಿಡಲಿಲ್ಲ’ ಎಂದರು.
ಹೃದಯ ತಜ್ಞ ಡಾ. ವಿವೇಕ್ ಜವಳಿ, ‘67 ವರ್ಷದ ಶಂಕರೇಗೌಡ ಅವರ ಹೃದಯವು ಹೆಚ್ಚಿನ ಹಾನಿಗೆ ಒಳಗಾಗಿತ್ತು. ಮೊದಲು ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದುಕೊಂಡಿದ್ದರು. ಎದೆನೋವು ಹೆಚ್ಚಳವಾದ್ದರಿಂದ ಅವರನ್ನು ಇಲ್ಲಿಗೆ ಸ್ಥಳಾಂತರಿಸಲಾಗಿತ್ತು. ಸೂಕ್ತ ಸಮಯದಲ್ಲಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಅವರನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.