ADVERTISEMENT

500 ಕೋಟಿ ಬಿಡುಗಡೆ: ಕೇಂದ್ರಕ್ಕೆ ಆಗ್ರಹ; ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2012, 19:30 IST
Last Updated 4 ಏಪ್ರಿಲ್ 2012, 19:30 IST

ಕೊಪ್ಪಳ: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಪರಿಹಾರದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತಕ್ಷಣ 500 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಇಲ್ಲಿ ಒತ್ತಾಯಿಸಿದರು.

ತಾಲ್ಲೂಕಿನ ವದಗನಾಳ ಗ್ರಾಮದಲ್ಲಿ ಗೋಶಾಲೆಯನ್ನು ಪರಿಶೀಲಿಸಿದ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬರಗಾಲ ಬಿದ್ದಾಗ ಕೇಂದ್ರವೂ ಸ್ಪಂದಿಸಬೇಕು ಮತ್ತು ಪರಿಹಾರ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಸಲುವಾಗಿ ಕೂಡಲೇ 500 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ ಅವರು, ಬರದ ವಾಸ್ತವ ಸ್ಥಿತಿ ಬಗ್ಗೆ ಅಧಿಕಾರಿಗಳಿಂದ ವರದಿ ಪಡೆದು ಕೇಂದ್ರಕ್ಕೆ ಈ ಸಂಬಂಧ ಮನವರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.

ಒತ್ತಾಯ: ಅಲ್ಲದೇ, ರಾಜ್ಯ ಸರ್ಕಾರ ಸಹ ಪ್ರತಿ ಜಿಲ್ಲೆಗೆ 5 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಬೇಕು ಎಂದೂ ಒತ್ತಾಯಿಸಿದರು.`ಬರ ಪೀಡಿತ ಜಿಲ್ಲೆಗಳಲ್ಲಿ ಏ. 8ರವರೆಗೆ ಪ್ರವಾಸ ಕೈಗೊಂಡು ಪರಿಸ್ಥಿತಿ ಅಧ್ಯಯನ ಮಾಡುವೆ. ನಂತರ ಈ ಬಗ್ಗೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರಿಗೆ ವರದಿ ಸಲ್ಲಿಸುವೆ. ಸದ್ಯ ರಾಜ್ಯ ಸರ್ಕಾರ ಸಹ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ಸಾಕಷ್ಟು ಹಣ ಬಿಡುಗಡೆ ಮಾಡಿದೆ.

ಆದರೆ ವಿರೋಧ ಪಕ್ಷಗಳ ನಾಯಕರು ಸುಮ್ಮನೆ ಟೀಕೆ ಮಾಡುವುದನ್ನು ಬಿಡಬೇಕು. ವಿಧಾನಸಭೆ ಅಧಿವೇಶನದಲ್ಲಿ ವೀರಾವೇಶದಿಂದ ಮಾತನಾಡಿದರೆ ರಿಹಾರ ಸಿಗುವುದಿಲ್ಲ. ಇಂತಹ ಸಂದರ್ಭದಲ್ಲಿ ಬರ ಪೀಡಿತ ಜಿಲ್ಲೆಗಳಿಗೆ ಧಾವಿಸಿ ಬಂದು ಜನರ ಕಷ್ಟಗಳನ್ನು ಅರಿತು ಸರ್ಕಾರದ ಗಮನಕ್ಕೆ ತರಬೇಕು~ ಎಂದು ಅವರು ತಿಳಿಸಿದರು.

ರಾಜ್ಯ ಸರ್ಕಾರ ಕೈಗೊಂಡಿರುವ ಬರ ಪರಿಹಾರ ಕಾರ್ಯಗಳ ಬಗ್ಗೆ ತೃಪ್ತಿ ಇದೆ. ಎಲ್ಲೂ ರೈತರಿಂದ ದೂರುಗಳು ಬಂದಿಲ್ಲ ಎಂದು  ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.