ತುರುವೇಕೆರೆ: ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ವಂಚನೆ ಮಾಡಿದ್ದಾರೆ. ನಾಲ್ಕು ವರ್ಷ ಕಳೆದರೂ ಅಚ್ಚೆ ದಿನ್ ಈ ದೇಶದ ಜನರಿಗೆ ಬರಲೇ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದರು.
ತುರುವೇಕೆರೆಯಲ್ಲಿ ಗುರುವಾರ ಕಾಂಗ್ರೆಸ್ ನಡಿಗೆ ವಿಜಯದ ಕಡೆಗೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ರೈತರು, ಬಡವರು ಸಂಕಷ್ಟದಲ್ಲಿದ್ದಾರೆ. ಇದ್ಯಾವುದು ಮೋದಿ ಅವರಿಗೆ ಕಾಣುತ್ತಿಲ್ಲ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 72 ಸಾವಿರ ಕೋಟಿ ಮೊತ್ತದ ರೈತರ ಸಾಲ ಮನ್ನಾ ಮಾಡಿದ್ದರು. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ 8,600 ಕೋಟಿ ಸಾಲ ಮನ್ನಾ ಮಾಡಿದ್ದಾರೆ.ಆದರೆ, ಮೋದಿ ಏನು ಮಾಡಿದ್ದಾರೆ? ಎಂದು ಪ್ರಶ್ನಿಸಿದರು. ಮೋದಿಗೆ ರೈತರ ಸಂಕಷ್ಟಗಳು ಅರ್ಥವಾಗಿದೆಯಾ ಎಂದು ಪ್ರಶ್ನಿಸಿದರು.
ಬಿಜೆಪಿಯವರಿಗೆ ಟೀಕೆ ಮಾಡುವುದು ಬಿಟ್ಟು ಏನು ಗೊತ್ತಿಲ್ಲ. ಜೆಡಿಎಸ್ ನವರಿಗೆ ಹೇಗಾದರೂ ಮಾಡಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬಾರದು ಎಂಬುದಷ್ಟೇ ಉದ್ದೇಶ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆ ಯಾರೂ ಮತ ಕೊಡಬಾರದು. ಒಂದು ವೇಳೆ ನೀವು ಅ ಪಕ್ಷಕ್ಕೆ ಮತ ಹಾಕಿದರೂ ಕೋಮುವಾದಿ ಬಿಜೆಪಿ ಪಕ್ಷಕ್ಕೆ ಮತ ಹಾಕಿದಂತಾಗುತ್ತದೆ. ಇಂತಹ ತಪ್ಪು ಮಾಡಬೇಡಿ ಎಂದರು.
ಮೂರು ಬಾರಿ ಈ ಕ್ಷೇತ್ರದಲ್ಲಿ ಜೆಡಿಎಸ್ ನವರೇ ಶಾಸಕರಾಗಿದ್ದಾರೆ. ಆದರೆ, ಏನು ಅಭಿವೃದ್ದಿ ಅಗಿದೆ ಎಂದು ಪ್ರಶ್ನಿಸಿದರು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಬೇಕು. ರಾಷ್ಟ್ರಮಟ್ಟದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕೈ ಬಲಪಡಿಸಬೇಕು ಎಂದು ಹೇಳಿದರು.
ಗುಜರಾತ್ ಚುನಾವಣೆಯಲ್ಲಿ ನರೇಂದ್ರ ಮೋದಿ ಅಧಿಕಾರ ಬಲ, ಹಣ ಬಲ, ತೋಳ್ಬಲದ ಮುಂದೆ ರಾಹುಲ್ ಗಾಂಧಿ ಏಕಾಂಗಿ ಹೋರಾಟ ನಡೆಸಿ ಕಾಂಗ್ರೆಸ್ ಶಕ್ತಿ ತೋರಿಸಿದ್ದಾರೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಂಸದ ಎಸ್.ಪಿ. ಮುದ್ದಹನುಮೇಗೌಡ, ಸಚಿವ ಟಿ.ಬಿ.ಜಯಚಂದ್ರ, ಶಾಸಕರಾದ ಕೆ.ಎನ್.ರಾಜಣ್ಣ, ವಿಧಾನ ಪರಿಷತ್ ಸದಸ್ಯ ಎಂ.ಡಿ. ಲಕ್ಷ್ಮಿನಾರಾಯಣ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.